ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ. ಮೂಲಗಳ ಪ್ರಕಾರ ಮೇ ಮೊದಲ ವಾರದಲ್ಲಿ ಎರಡು ಹಂತಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಮಾರ್ಚ್ 20ರ ನಂತರ ಚುನಾವಣಾ ಆಯೋಗ ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಾಂಕ ಮತ್ತು ನೀತಿಸಂಹಿತೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಇಡೀ ಭಾರತ ದೇಶ ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆಯ ಬಗ್ಗೆ ಕುತೂಹಲ ಹೊಂದಿದೆ.
ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿವೆ. ಯಾವ ಕ್ಷೇತ್ರಗಳಲ್ಲಿ ಯಾರನ್ನು ಅಭ್ಯರ್ಥಿಯಾಗಿಸಬೇಕು ? ಯಾವ ಜಾತಿಯ ಅಭ್ಯರ್ಥಿಗೆ ಮಣೆ ಹಾಕಬೇಕು ? ಯಾರನ್ನು ಬಿಡಬೇಕು, ಯಾರನ್ನು ಪಕ್ಷಕ್ಕೆ ಸೆಳೆಯಬೇಕು ಎಂಬ ಲೆಕ್ಕಾಚಾರ ಶುರುವಾಗಿದೆ. ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದ್ದು, ಅನೇಕ ಕಡೆ ಹಾಲಿ ಮತ್ತು ಮಾಜಿ ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರಲು ಸಜ್ಜಾಗಿದ್ದಾರೆ. ಎಲ್ಲಾ ಕಡೆ ರಾಜಕೀಯ ಪಕ್ಷಗಳ ರ್ಯಾಲಿಗಳು, ಸಮಾವೇಶಗಳು, ಸಭೆಗಳು ನಿರಂತರ ನಡೆಯುತ್ತಲಿವೆ.
ನಮ್ಮ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ದಿನದಿಂದ ದಿನಕ್ಕೆ ರಾಜಕೀಯ ರಂಗು ಪಡೆದುಕೊಳ್ಳುತ್ತಿದೆ. ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆಯ ಕಾವು ಏರುತ್ತಿದೆ. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.
ನಮ್ಮ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಪಕ್ಷಗಳು ಪಡೆದ ಮತಗಳ ವಿವರ ಇಲ್ಲಿದೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿ.ಜೆ.ಪಿ. 4 ಕ್ಷೇತ್ರಗಳನ್ನು ಗೆದ್ದಿದ್ದರೆ, ಕಾಂಗ್ರೇಸ್ ಶೃಂಗೇರಿ ಕ್ಷೇತ್ರದಲ್ಲಿ ಜಯ ಸಾಧಿಸಿತ್ತು.