ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿದೆ.
ನಮ್ಮ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರ ಹೊರತುಪಡಿಸಿ ಉಳಿದ ಯಾವುದೇ ಕ್ಷೇತ್ರದ ಹೆಸರು ಮೊದಲ ಪಟ್ಟಿಯಲ್ಲಿ ಇಲ್ಲ. ಶೃಂಗೇರಿ ಕ್ಷೇತ್ರದಿಂದ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರ ಹೆಸರು ಮೊದಲ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಉಳಿದಂತೆ ಮೂಡಿಗೆರೆ, ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ಕ್ಷೇತ್ರದಿಂದ ಯಾರು ಅಭ್ಯರ್ಥಿ ಎಂದು ಇನ್ನೂ ಅಂತಿಮಗೊಳಿಸಿಲ್ಲ.
ಬಹು ಕುತೂಹಲ ಕೆರಳಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರವು ಅಂತಿಮಗೊಳಿಸಿದ್ದು, ಅವರು ವರುಣಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕನಕಪುರದಿಂದ ಸ್ಪರ್ಧಿಸಲಿದ್ದಾರೆ. ನೆರೆಯ ಸಕಲೇಶಪುರ ಮೀಸಲು ಕ್ಷೇತ್ರದಿಂದ ಮುರಳಿ ಮೋಹನ್, ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಂ ಹೆಸರು ಮೊದಲ ಪಟ್ಟಿಯಲ್ಲಿ ಪ್ರಕಟವಾಗಿದೆ.
ಈ ಮೂಲಕ ಕಾಂಗ್ರೇಸ್ ಉಳಿದ ಪಕ್ಷಗಳಿಗಿಂತ ಮೊದಲು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಭರ್ಜರಿಯಾಗಿಯೇ ಚುನಾವಣಾ ಅಖಾಡಕ್ಕೆ ಸಜ್ಜಾಗಿದೆ.