ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಯ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ತಾಲ್ಲೂಕಿನ ದಲಿತ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.
ನಿನ್ನೆ ಮೂಡಿಗೆರೆ ಪ್ರವಾಸಿ ಮಂದಿರದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್.ಅನಂತ್ ಅವರ ನೇತೃತ್ವದಲ್ಲಿ ಸಭೆ ಸೇರಿದ್ದ ವಿವಿಧ ಪಕ್ಷಗಳ ದಲಿತ ಮುಖಂಡರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮೂಡಿಗೆರೆ ಮೀಸಲು ಕ್ಷೇತ್ರದಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸ್ಥಳೀಯರಿಗೆ ಮಾತ್ರ ಸಾಧ್ಯವಿದೆ. ಕ್ಷೇತ್ರದ ಹೊರಗಿನ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಅವರನ್ನು ಹುಡುಕಿಕೊಂಡು ಹೋಗಬೇಕಾಗುತ್ತದೆ. ಮೂಡಿಗೆರೆ ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳಲ್ಲಿಯೂ ಉತ್ತಮ ರಾಜಕೀಯ ಪ್ರಜ್ಞೆ, ಸಾಮಾಜಿಕ ಕಳಕಳಿ ಮತ್ತು ಮತ್ತು ಶಿಕ್ಷಣ ಪಡೆದ ದಲಿತ ಸಮುದಾಯದ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಹಾಗಾಗಿ ಸ್ಥಳೀಯರಿಗೆ ಅವಕಾಶ ನೀಡಬೇಕು, ಇದರಿಂದ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ.
ಈ ಸಂಬಂಧ ಇದೇ ಮಾರ್ಚ್ 29ರ ಬುಧವಾರ ಮೂಡಿಗೆರೆಯಲ್ಲಿ ದಲಿತ ಸಮುದಾಯದ ಬಹಿರಂಗ ಸಭೆ ನಡೆಸಲಾಗುವುದು. ಅಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಎಲ್ಲಾ ಪಕ್ಷಗಳನ್ನು ಆಗ್ರಹಿಸಲಾಗುವುದು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಮುಖಂಡರು ತಿಳಿಸಿದ್ದಾರೆ.