ಕಾಂಗ್ರೇಸ್ ಪಕ್ಷ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಒಟ್ಟು 42 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದ ಕಾಂಗ್ರೇಸ್ ಇದೀಗ ಒಟ್ಟು 166 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದಂತಾಗಿದೆ.
ಇನ್ನೂ 58 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ನಡೆಸಿದ್ದು, ಮೂರ್ನಾಲ್ಕು ದಿನದಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮುನ್ಸೂಚನೆ ನೀಡಿದೆ.
ನಿನ್ನೆ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ನಮ್ಮ ಜಿಲ್ಲೆಯ ಕಡೂರು ಕ್ಷೇತ್ರಕ್ಕೆ ಕೆ.ಎಸ್. ಆನಂದ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇಲ್ಲಿ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರಿಗೆ ಟಿಕೆಟ್ ನೀಡಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ದತ್ತಾ ಇತ್ತೀಚೆಗಷ್ಟೇ ಜೆ.ಡಿ.ಎಸ್. ತೊರೆದು ಕಾಂಗ್ರೇಸ್ ಸೇರಿದ್ದರು. ಆದರೆ ನಿರೀಕ್ಷೆಯನ್ನು ಹುಸಿಗೊಳಿಸಿ ಕಳೆದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಕೆ.ಎಸ್.ಆನಂದ್ ಅವರನ್ನೇ ಕಾಂಗ್ರೇಸ್ ಮತ್ತೆ ಕಣಕ್ಕಿಳಿಸಿದೆ.
ಮೊದಲ ಪಟ್ಟಿಯಲ್ಲಿ ಜಿಲ್ಲೆಯ ಶೃಂಗೇರಿ ಕ್ಷೇತ್ರಕ್ಕೆ ಹಾಲಿ ಶಾಸಕ ಟಿ.ಡಿ.ರಾಜೇಗೌಡರ ಹೆಸರನ್ನು ಘೋಷಣೆ ಮಾಡಲಾಗಿತ್ತು.
ಜಿಲ್ಲೆಯ ಇನ್ನೂ ಮೂರು ಕ್ಷೇತ್ರಗಳಿಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಬಾಕಿ ಇದೆ. ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.
ಎರಡನೇ ಪಟ್ಟಿಯಲ್ಲಿ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಈ ಮೂರು ಕ್ಷೇತ್ರಗಳಲ್ಲಿ ಪಕ್ಷದ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ತರೀಕೆರೆಯಲ್ಲಿ ಮಾಜಿ ಶಾಸಕ ಶ್ರೀನಿವಾಸ್ ಮತ್ತು ಗೋಪಿಕೃಷ್ಣ ನಡುವೆ ಪೈಪೋಟಿಯಿದೆ.
ಮೂಡಿಗೆರೆಯಲ್ಲಿ ನಯನ ಮೋಟಮ್ಮ ಅವರ ಹೆಸರನ್ನೇ ಅಂತಿಮಗೊಳಿಸಬಹುದು ಎಂದು ಚರ್ಚೆಗಳು ನಡೆದಿದ್ದವು. ಆದರೆ ಎರಡನೇ ಪಟ್ಟಿಯಲ್ಲಿಯೂ ಹೆಸರು ಘೋಷಣೆ ಮಾಡದೇ ಇರುವುದನ್ನು ಗಮನಿಸಿದರೆ ಇಲ್ಲಿನ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ತೀವ್ರ ಒತ್ತಡ ಇದ್ದಂತೆ ತೋರುತ್ತದೆ.
ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಮೂರ್ನಾಲ್ಕು ಜನರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಇಲ್ಲಿಯೂ ವರಿಷ್ಠರ ಮೇಲೆ ಹೆಚ್ಚಿನ ಒತ್ತಡ ಇದ್ದಂತೆ ಕಂಡುಬರುತ್ತಿದೆ.