ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿ.ಜೆ.ಪಿ.) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ರಾಜ್ಯದ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಪಕ್ಷದ ಮುಖಂಡ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದಾರೆ.
ಈ ಬಾರಿ ಅನೇಕ ಹಿರಿಯ ಮುಖಂಡರಿಗೆ ಮತ್ತು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅನೇಕ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿಗ್ಗಾಂವ್ ಕ್ಷೇತ್ರದಿಂದ ಮತ್ತೊಮ್ಮೆ ಅಭ್ಯರ್ಥಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನ ಕ್ಷೇತ್ರಗಳಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸಿ.ಟಿ. ರವಿ, ಶೃಂಗೇರಿ ಕ್ಷೇತ್ರದಿಂದ ಡಿ.ಎನ್. ಜೀವರಾಜ್, ಕಡೂರು ಕ್ಷೇತ್ರದಿಂದ ಬೆಳ್ಳಿಪ್ರಕಾಶ್, ತರೀಕೆರೆ ಕ್ಷೇತ್ರದಿಂದ ಡಿ.ಎಸ್. ಸುರೇಶ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಆದರೆ ಜಿಲ್ಲೆಯ ಮೂಡಿಗೆರೆ ಕ್ಷೇತ್ರದಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಮೂಡಿಗೆರೆ ಕ್ಷೇತ್ರದ ಹೆಸರನ್ನು ಘೋಷಣೆ ಮಾಡದೇ ಬಾಕಿ ಉಳಿಸಿಕೊಳ್ಳಲಾಗಿದೆ. ಕ್ಷೇತ್ರದಲ್ಲಿ ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿಯವರಿಗೆ ಅಥವಾ ಹೊಸಬರಿಗೆ ಟಿಕೆಟ್ ನೀಡುತ್ತಾರೋ ಎಂಬುದು ತೀವ್ರ ಕುತೂಹಲ ಕೆರಳಿಸಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರದ ಹೆಸರನ್ನು ಘೋಷಣೆ ಮಾಡದೇ ಇರುವುದು ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಮತ್ತು ಕಾರ್ಯಕರ್ತರ ಹಾಗೂ ಮತದಾರರ ಕುತೂಹವನ್ನು ಮತ್ತಷ್ಟು ಹೆಚ್ಚಿಸಿದೆ.
ನೆರೆಯ ಹಾಸನ ಜಿಲ್ಲೆಯ ಬೇಲೂರಿನಿಂದ ಹುಲ್ಲಹಳ್ಳಿ ಸುರೇಶ್, ಸಕಲೇಶಪುರದಿಂದ ಸಿಮೆಂಟ್ ಮಂಜು ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಎದುರು ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲಾಗಿದೆ.