ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿ.ಜೆ.ಪಿ. ತೊರೆದು ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ. ಪಕ್ಷ ಸೇರ್ಪಡೆಯ ಬೆನ್ನಿಗೆ ಅವರನ್ನು ಮೂಡಿಗೆರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ
ಇಂದು ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎ. ಇಬ್ರಾಹಿಂ, ಮುಖಂಡರಾದ ಹೆಚ್.ಡಿ.ರೇವಣ್ಣ, ಎಸ್.ಎಲ್. ಬೋಜೇಗೌಡ, ಜಿಲ್ಲಾ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಸಮ್ಮುಖದಲ್ಲಿ ಎಂ.ಪಿ. ಕುಮಾರಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಜೆ.ಡಿ.ಎಸ್. ಪಕ್ಷವನ್ನು ಸೇರಿದ್ದಾರೆ.
ಈ ಸಂದರ್ಭದಲ್ಲಿ ಜೆ.ಡಿ.ಎಸ್.ಪಕ್ಷದ ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯ ಅನೇಕ ಮುಖಂಡರು ಉಪಸ್ಥಿತರಿದ್ದರು.
ಬಿ.ಜೆ.ಪಿ.ಯಿಂದ ಟಿಕೆಟ್ ಕೈತಪ್ಪಿದ್ದರಿಂದ ಬಿ.ಜೆ.ಪಿ.ಗೆ ರಾಜೀನಾಮೆ ನೀಡಿದ್ದ ಕುಮಾರಸ್ವಾಮಿಯವರು ಇಂದು ಶಿರಸಿಯಲ್ಲಿ ವಿಧಾನಸಭೆಯ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ನೇರವಾಗಿ ಬೆಂಗಳೂರಿಗೆ ತೆರಳಿ ಅಲ್ಲಿ ಜೆ.ಡಿ.ಎಸ್. ಪಕ್ಷವನ್ನು ಸೇರಿದ್ದಾರೆ. ಅವರನ್ನು ಮೂಡಿಗೆರೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಜೆ.ಡಿ.ಎಸ್. ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರಕ್ಕೆ ಬಿ.ಬಿ.ನಿಂಗಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತ್ತು. ಬಿ.ಬಿ.ನಿಂಗಯ್ಯನವರ ಮುಂದಿನ ರಾಜಕೀಯ ನಡೆ ಏನೆಂಬುದು ಕುತೂಹಲ ಕೆರಳಿಸಿದೆ.