ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪರವಾಗಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಚಾರ ಭಾಷಣ ಮಾಡಿದರು. ನಿನ್ನೆ ಕ್ಷೇತ್ರದ ಕಳಸ ತಾಲ್ಲೂಕು ಕೇಂದ್ರದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಜೆ.ಪಿ. ನಡ್ಡಾ ಅವರು ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆ.ಪಿ. ನಡ್ಡಾ ಅವರು ಬಿ.ಜೆ.ಪಿ. ಡಬಲ್ ಎಂಜಿನ್ ಸರ್ಕಾರದಿಂದ ದೇಶದ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಹೊಡ ಮೈಲಿಗಲ್ಲು ಸಾಧಿಸಲಾಗಿದೆ. ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ದೇಶವು ಹೊಸ ಭವಿತವ್ಯದೆಡೆಗೆ ಸಾಗುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ, ಶಕ್ತಿ ಹೆಚ್ಚಾಗಿದೆ. ಭಾರತ ಆರ್ಥಿಕವಾಗಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ.
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಬಿ.ಜೆ.ಪಿ. ಕಟಿಬದ್ಧವಾಗಿ ಕೆಲಸ ಮಾಡುತ್ತಿದೆ. ಐತಿಹಾಸಿಕ ಒಳಮೀಸಲಾತಿಯನ್ನು ಜಾರಿಗೆ ತಂದು ತಳಸಮುದಾಯದ ಏಳಿಗೆಗೆ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. ಈ ಬಾರಿ ಮೂಡಿಗೆರೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ದೀಪಕ್ ದೊಡ್ಡಯ್ಯ ನವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಮಾತ್ರವಲ್ಲ ದೇಶದಲ್ಲಿ ನರೇಂದ್ರ ಮೋದಿಯವರಿಗೆ ಮತ್ತಷ್ಟು ಶಕ್ತಿಯನ್ನು ತುಂಬಬೇಕು ಎಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಎಂ.ಎಲ್.ಸಿ. ಎಂ.ಕೆ. ಪ್ರಾಣೇಶ್, ಬಿ.ಜೆ.ಪಿ. ಅಭ್ಯರ್ಥಿ ದೀಪಕ್ ದೊಡ್ಡಯ್ಯ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ಎಂ.ಎ. ಶೇಷಗಿರಿ, ಜೆ.ಎಸ್.ರಘು, ದಿನೇಶ್, ಕೆ.ಸಿ. ರತನ್ ಮುಂತಾದವರು ಉಪಸ್ಥಿತರಿದ್ದರು.