ಕಲುಷಿತಗೊಂಡಿರುವ ರಾಜಕೀಯ ವ್ಯವಸ್ಥೆಯಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಪ್ರಾಮಾಣಿಕ, ಜನಪರ ಹೋರಾಟದ ರಾಜಕೀಯಕ್ಕೆ ಸೋಲಾಗಿದೆ ಎಂದು ಸಿಪಿಐ ಮುಖಂಡ ಬಿ.ಕೆ.ಲಕ್ಷ್ಮಣ್ಕುಮಾರ್ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಜನರಿಗೆ ಅವಶ್ಯಕತೆ ಎನಿಸಿತ್ತು. ಅಲ್ಲದೇ ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ಬೇಸತ್ತಿದ್ದ ರಾಜ್ಯದ ಜನತೆ ಪ್ರಧಾನಿ ಮೋದಿ ಅವರಂತಹ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದರೂ ಕ್ಯಾರೆ ಎನ್ನದೇ ಬಿಜೆಪಿಯನ್ನು ತಿರಸ್ಕಾರ ಮಾಡಿದ್ದಾರೆ. ಇದು ಜಾತ್ಯಾತೀತ ನಿಲುವಿಗೆ ಹಿಡಿದ ಕೈಗನ್ನಡಿಯಾಗಿದೆ.
ಮೂಡಿಗೆರೆ ಕ್ಷೇತ್ರ ಹೊರತುಪಡಿಸಿ ರಾಜ್ಯದಲ್ಲಿ 215 ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಸಿಪಿಐ ಪಕ್ಷ ಬೆಂಬಲ ಸೂಚಿಸಲಾಗಿತ್ತು. ಈ ಬಗ್ಗೆ ಮೂಡಿಗೆರೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದ ವೇಳೆ ಮತದಾರರಲ್ಲಿ ಅರಿವು ಮೂಡಿಸುವಲ್ಲಿ ವಿಫಲರಾಗಿದ್ದರಿಂದ ಪಕ್ಷದ ಅಭ್ಯರ್ಥಿ ಕಡಿಮೆ ಮತ ಪಡೆಯಲು ಕಾರಣವಾಗಿದೆ. ಈ ಬಗ್ಗೆ ಪಕ್ಷದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲಾಗಿದ್ದು, ಇಂತಹ ನ್ಯೂನ್ಯತೆ ಮುಂದೆ ಬಾರದಂತೆ ಎಚ್ಚರ ವಹಿಸಲಾಗಿದೆ.
ಮುಂಬರುವ ಎಲ್ಲಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದ ಅವರು, ರಾಜ್ಯ ಸರಕಾರ 5 ಗ್ಯಾರಂಟಿಯನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಸಿಪಿಐ ಮುಖಂಡರಾದ ಗೋಪಾಲ್ ಎನ್ಶೆಟ್ಟಿ, ರಮೇಶ್ ಕೆಳಗೂರು, ಸುಂದರ್ ಸಂಪ್ಲಿ, ಲೋಕೇಶ್ ಕಲ್ಮನೆ ಉಪಸ್ಥಿತರಿದ್ದರು.