ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
2 ವರ್ಷಗಳಿಂದ ಚಿಕ್ಕಮಗಳೂರ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಅವರು ಕಾರ್ಯ ನಿರ್ವಹಿಸಿದ್ದರು. ಅವರನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತರಾಗಿ ಸರ್ಕಾರ ವರ್ಗಾಯಿಸಿದೆ.
ಜಿ.ಪ್ರಭು ಅವರು ಚಿಕ್ಕಮಗಳೂರು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬಂದ ಮೇಲೆ ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದರು. ಜನಸ್ನೇಹಿ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಿದ್ದರು. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆರೆಗಳ ಅಭಿವೃದ್ಧಿ, ಸರ್ಕಾರಿ ಶಾಲೆಗಳಿಗೆ ಸಿಂಥೆಟಿಕ್ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಇದೀಗ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾಗಿ ನೇಮಕವಾಗಿದ್ದು, ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಪಡೆದಿರುತ್ತಾರೆ.