ಇಂದು ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ಮಹತ್ವದ ನಿರ್ಧಾರದಂತೆ ಬಿ.ಪಿ.ಎಲ್. ಕಾರ್ಡ್ದಾರರಿಗೆ 5 ಕೆ.ಜಿ. ಅಕ್ಕಿಯ ಬದಲಿಗೆ ಖಾತೆಗೆ ಹಣವನ್ನು ಹಾಕಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ ನೀಡಿದ್ದು ಈಗಾಗಲೇ ನೀಡುತ್ತಿರುವ 5 ಕೆ.ಜಿ. ಅಕ್ಕಿ ಎಂದಿನಂತೆ ವಿತರಣೆ ಆಗಲಿದ್ದು, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿದ್ದ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಗ್ರಾಹಕರ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು ಎಂದಿದ್ದಾರೆ. ವಿತರಣೆಗೆ ಬೇಕಾದ ಹೆಚ್ಚುವರಿ ಅಕ್ಕಿ ಲಭ್ಯವಾಗದೇ ಇರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಪ್ರತಿ ಕೆ.ಜಿ. ಅಕ್ಕಿಗೆ 34 ರೂ. ನಂತೆ ಹಣವನ್ನು ಜಮಾಮಾಡಲಾಗುವುದು. ಇದೇ ಜುಲೈ 1 ರಿಂದಲೇ ಹಣವನ್ನು ಜಮಾ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.