ಚಿಕ್ಕಮಗಳೂರು ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ದೂರಿನ ಮೇಲೆ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ್ ಎಂಬುವವರ ಮನೆ ಮತ್ತು ಇತರೆ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಗಂಗಾಧರ್ ಅವರಿಗೆ ಸೇರಿದ ಜಯನಗರ ಬಡಾವಣೆ ಮನೆ, ರಾಮನಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್, ಗಂಗಾಧರ್ ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಮೇಲೆ ಏಕಕಾಲದಲ್ಲಿ 50ಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಇಂದು ರಾಜ್ಯದ ನಾನಾ ಭಾಗಗಳಲ್ಲಿ ಲೋಕಾಯುಕ್ತ ಪೊಲೀಸರು ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಗಂಗಾಧರ್ ಅವರು ಚಿಕ್ಕಮಗಳೂರು ನಿರ್ಮಿತಿ ಕೇಂದ್ರದಲ್ಲಿ ಯೋಜನಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮಾಹಿತಿ ಬಂದಿದ್ದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.