ಬಿ.ಜೆ.ಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ ಹೆಸರನ್ನು ಕೈಬಿಡಲಾಗಿದೆ. ಇಂದು ಬಿಡುಗಡೆ ಮಾಡಿದ ಪುನರಚಿತ ನೂತನ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯಲ್ಲಿ ಸಿ.ಟಿ.ರವಿಯವರಿಗೆ ಸ್ಥಾನ ನೀಡಲಾಗಿಲ್ಲ.
ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿ.ಟಿ.ರವಿಯವರು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ನನಗೆ ಅವಕಾಶ ಮಾಡಿಕೊಟ್ಟ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತುಂಬು ಹೃದಯದ ಧನ್ಯವಾದಗಳು.
ಈ ಹುದ್ದೆ ನನಗೆ ಸಾಕಷ್ಟು ಅನುಭವಗಳನ್ನು ನೀಡಿದೆ ಜೊತೆಗೆ ಬದುಕಿಗೆ ಹೊಸ ಆಯಾಮ ನೀಡಿದೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗಿನ ನನ್ನ ಪಯಣದಲ್ಲಿ ನಿರಂತರ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಅದೇ ಭಾವದಿಂದ ಕೆಲಸ ಮಾಡುತ್ತೇನೆ. ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದಿದ್ದಾರೆ.
ಈ ನಡುವೆ ಬಿ.ಜೆ.ಪಿ. ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿಯವರನ್ನು ನೇಮಿಸಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಬದಲಿಸಿ ಬೇರೆಯವರಿಗೆ ರಾಜ್ಯ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಬಿ.ಜೆ.ಪಿ.ಯಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಜೊತೆಗೆ ಬಿ.ಜೆ.ಪಿ. ಇನ್ನೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಯಾರನ್ನೂ ಆಯ್ಕೆ ಮಾಡಿಲ್ಲ.
ಸದ್ಯಕ್ಕೆ ರಾಜ್ಯದೆಲ್ಲೆಡೆ ಜನಪ್ರಿಯತೆ ಹೊಂದಿರುವ ಸಿ.ಟಿ.ರವಿಯವರು ರಾಜ್ಯಾಧ್ಯಕ್ಷ ಹುದ್ದೆಯ ಪ್ರಮುಖ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ರವಿಯವರನ್ನು ಕೈಬಿಟ್ಟಿರುವುದು ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವುದರ ಮುನ್ಸೂಚನೆಯಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ.