ಮೂಡಿಗೆರೆ ಬೆಳೆಗಾರರ ಸಂಘದ ವತಿಯಿಂದ ಬೆಳೆಗಾರರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇಂದು ಮೂಡಿಗೆರೆಗೆ ಆಗಮಿಸಿದ್ದ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿ ಮಾಡಿದ ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷರಾದ ಬಿ.ಆರ್.ಬಾಲಕೃಷ್ಣ ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದರು.
ಮನವಿಯಲ್ಲಿ ರೈತರಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ ಹತ್ತು ಹೆಚ್.ಪಿವರೆಗಿನ ರೈತರ ವಿದ್ಯುತ್ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಕಾರ್ಯಗತಗೊಳಿಸುವಂತೆ ಹಾಗೆಯೇ ಕಾಫಿ ಬೆಳೆಗಾರರು ಬಾಕಿ ಉಳಿಸಿಕೊಂಡಿರುವ ಪಂಪ್ ಸೆಟ್ ಶುಲ್ಕದ ಅಸಲು ಮತ್ತು ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಕೋರಲಾಯಿತು.
ಹಾಗೆಯೇ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದು ಸುಸ್ತಿಯಾಗಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವಂತೆ ಕೋರಲಾಯಿತು. ಸರ್ಕಾರಿ ಒತ್ತುವರಿ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಹಿಂದಿನ ಸರ್ಕಾರ ಅನುಮೋದಿಸಿರುವುದು ಕಾರ್ಯರೂಪಕ್ಕೆ ತಂದು ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕು.
ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ರೈತರು ಕೃಷಿಮಾಡುವುದೇ ಕಷ್ಟವಾಗಿದೆ. ಕಾಫಿ ತೋಟಗಳಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಲು ಸಾಧ್ಯವಾಗದೇ ಜಮೀನುಗಳು ಪಾಳು ಬೀಳುತ್ತಿವೆ ಆದ್ದರಿಂದ ಕಾಡಾನೆಗಳನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕು ಮತ್ತು ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು.
ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಅವರು ಸಾಗುವಳಿ ಮಾಡಿರುವ ಜಮೀನಿಗೆ ಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಬೆಳೆಗಾರರ ಸಂಘದ ಕಾರ್ಯದರ್ಶಿ ಮನೋಹರ್, ಬಿ.ಎಸ್. ಜಯರಾಮ್, ಹೆಚ್.ಆರ್. ಅಶೋಕ್, ಬಿ.ಆರ್. ಯತೀಶ್, ದೇವರಾಜು ನಿಡುವಾಳೆ, ಬಿ.ಎಂ.ನಟೇಶ್ ಬಾಳೂರು, ಚೆನ್ನಕೇಶವ ಮೇಗೂರು ಮತ್ತಿತರರು ಉಪಸ್ಥಿತರಿದ್ದರು.