ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಮ್ಮ ದೇಶದ ಒಂಬತ್ತು ಮಂದಿ ವೀರಯೋಧರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಪೂರ್ವ ಲಡಾಖ್ನ ಖೇರಿ ಬಳಿ ಜವಾನರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಆಳವಾದ ಕಣಿವೆಗೆ ಬಿದ್ದು 9 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ. ಈ ವಾಹನವು 10 ಮಂದಿ ಯೋಧರೊಂದಿಗೆ ಕಾರು ಗ್ಯಾರಿಸನ್ನಿಂದ ಖೇರಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಓರ್ವ ಅಧಿಕಾರಿ ಸೇರಿದಂತೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಐದು ವಾಹನಗಳ ಸೇನಾ ಬೆಂಗಾವಲು ಪಡೆ ಖೇರಿಗೆ ತೆರಳುತ್ತಿದ್ದಾಗ, ಅವುಗಳಲ್ಲಿ ಒಂದು ವಾಹನ ಅಪಘಾತಕ್ಕೀಡಾಗಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳು ಬಹಿರಂಗಪಡಿಸಿವೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಂಪೂರ್ಣ ವಿವರ ತಿಳಿದು ಬಂದಿಲ್ಲ. ಮೃತರ ಕುಟುಂಬಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಯೋಧರನ್ನು ಕಳೆದುಕೊಂಡಿರುವುದು ತುಂಬಾ ನೋವಿನ ಸಂಗತಿ. ದೇಶಕ್ಕೆ ಅವರು ಸಲ್ಲಿಸಿದ ಸೇವೆ ಎಂದಿಗೂ ಮರೆಯಲಾಗದು ಎಂದರು. ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸಿದರು. ಹಾಗೂ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.