ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿ ಮಂಜೂರು ಮಾಡಿಕೊಟ್ಟಿರುವ ಪ್ರಕರಣದಲ್ಲಿ ತಾಲ್ಲೂಕಿನ ಈ ಹಿಂದಿನ ತಹಸೀಲ್ದಾರ್ ಉಮೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಮೇಶ್ ವಿರುದ್ಧ ಕಡೂರು ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಕಡೂರು ಪೊಲೀಸರು ಉಮೇಶ್ ನನ್ನು ಬೆಂಗಳೂರಿನಲ್ಲಿ ಬಂಧಿಸಿ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಮೂಡಿಗೆರೆ ತಾಲ್ಲೂಕುಗಳಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿಯನ್ನು ಕಾನೂನು ಬಾಹೀರವಾಗಿ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿಕೊಡಲಾಗಿದೆ ಎಂಬ ಆರೋಪಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಪ್ರಕರಣದ ಸಮಗ್ರ ತನಿಖೆಗೆ ೧೫ ತಹಸೀಲ್ದಾರ್ ಗ್ರೇಡ್ ಅಧಿಕಾರಿಗಳನ್ನು ನೇಮಕ ಮಾಡಿತ್ತು.
ಆ ತಂಡ ಮೊದಲಿಗೆ ಕಡೂರು ತಾಲ್ಲೂಕಿನ ಅಕ್ರಮ ಕಡತಗಳ ಪರಿಶೀಲನೆಯಲ್ಲಿ ತೊಡಗಿದೆ. ಈ ಸಂದರ್ಭದಲ್ಲಿ ಕಡೂರು ತಾಲ್ಲೂಕಿನಲ್ಲಿ ಸುಮಾರು ಮೂರು ಸಾವಿರ ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ಕಂಡು ಬಂದಿತ್ತು. ಕೆಲವು ಸರ್ಕಾರಿ ಅಧಿಕಾರಿಗಳಿಗೆ, ಭೂಮಾಲೀಕರಿಗೆ ಹಣವನ್ನು ಪಡೆದು ಬೇಕಾಬಿಟ್ಟಿ ಭೂಮಿ ಮಂಜೂರು ಮಾಡಿರುವುದು ಕಂಡು ಬಂದಿತ್ತು. ರಕ್ಷಿತಾರಣ್ಯದಲ್ಲಿಯೂ ಭೂಮಿ ಮಂಜೂರು ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು.
ಈ ಅಕ್ರಮದಲ್ಲಿ ಮುಖ್ಯ ಆರೋಪಿಯಾಗಿರುವ ಕಡೂರು ತಾಲ್ಲೂಕಿನ ಹಿಂದಿನ ತಹಸೀಲ್ದಾರ್ ಉಮೇಶ್ ಎಂಬಾತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಕಾರಾವಾರ ಸೀಬರ್ಡ್ ನೌಕಾನೆಲೆಯಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ನನ್ನು ಕಡೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.