ವರ್ಗಾವಣೆ ಗೊಂದಲ, ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸುವಲ್ಲಿ ಆಗುತ್ತಿರುವ ವಿಳಂಬ ಹಾಗೂ ಇನ್ನಿತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು(ಪಿಡಿಓ) ಸೆಪ್ಟಂಬರ್ 8 ರಿಂದ ಅಸಹಕಾರ ಚಳವಳಿ ನಡೆಸಲು ಮುಂದಾಗಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಕರ್ನಾಟಕ ರಾಜ್ಯ ಪಿಡಿಓ ಕ್ಷೇಮಾಭಿವೃದ್ಧಿ ಸಂಘ ತಮ್ಮ ನಿರ್ಧಾರದ ಬಗ್ಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರಿಗೆ ಪತ್ರ ಸಲ್ಲಿಸಿದೆ. ಸೆಪ್ಟಂಬರ್ 8ರೊಳಗೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಅಸಹಕಾರ ಚಳವಳಿ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
ಪಿಡಿಓ ಹುದ್ದೆ ಸೃಷ್ಟಿಯಾಗಿ 13 ವರ್ಷ ಕಳೆದರೂ ಕ್ರಮಬದ್ಧವಾದ ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸಿಲ್ಲ. ಬಡ್ತಿ ನೀಡಲು ವಿಳಂಬ ಮಾಡಲಾಗುತ್ತಿದೆ. ವರ್ಗಾವಣೆ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸದೇ ಗೊಂದಲ ಸೃಷ್ಟಿಸಲಾಗಿದೆ. ಪಿಡಿಓ ಹುದ್ದೆಯನ್ನು ಗ್ರೂಪ್ ಬಿ. ವೃಂದಕ್ಕೆ ಮೇಲ್ದರ್ಜೆಗೇರಿಸಬೇಕೆಂಬ ಬೇಡಿಕೆ ಈಡೇರಿಸಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪಿಡಿಓ. ಗಳ ಸೇವಾ ವಿಷಯವನ್ನು ಸಕಾಲ ಕಾಯ್ದೆಯ ವ್ಯಾಪ್ತಿಗೆ ತಂದಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ನೇಮಕಾತಿ ಮಾಡದೇ ಇರುವುದರಿಂದ ಪಿಡಿಓಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ರಜೆದಿನಗಳಲ್ಲಿಯೂ ಕರ್ತವ್ಯ ನಿರ್ವಹಿಸುವಂತೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಸರ್ಕಾರ ಪಿಡಿಓ ಗಳ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.
ಸೆಪ್ಟಂಬರ್ 8 ರ ಒಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ಇಲಾಖೆಯ ವ್ಯಾಟ್ಸಪ್ ಗುಂಪುಗಳಿಂದ ಹೊರಬರುತ್ತಾರೆ. ಹಿರಿಯ ಅಧಿಕಾರಿಗಳು ಕರೆಯುವ ಸಭೆಗೆ ಗೈರಾಗಲಿದ್ದಾರೆ. ಆನ್ ಲೈನ್ ಸೇವೆಗಳನ್ನೂ ಸ್ಥಗಿತಗೊಳಿಸುತ್ತಾರೆ. ಇಲಾಖೆಯ ಮೂಲ ಸೇವೆಗಳನ್ನು ಮಾತ್ರ ಒದಗಿಸುವ ಮೂಲಕ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಬೇಡಿಕೆ ಈಡೇರಿಸದಿದ್ದರೆ ಸೆಪ್ಟಂಬರ್ 14 ರಿಂದ ಪಂಚಾಯತ್ ರಾಜ್ ಆಯುಕ್ತಾಲಯದ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಸಂಘವು ಎಚ್ಚರಿಸಿದೆ.