ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿತೋಟಕ್ಕೆ ಉರುಳಿಬಿದ್ದ ಘಟನೆ ಮೂಡಿಗೆರೆ ತಾಲ್ಲೂಕಿನ ದೇವರಮನೆ ರಸ್ತೆಯಲ್ಲಿ ಸಂಭವಿಸಿದೆ.
ಬಣಕಲ್ ನಿಂದ ದೇವರಮನೆಗೆ ಹೋಗುವ ಕೋಗಿಲೆ ರಸ್ತೆಯ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ತಡೆಗೋಡೆಯನ್ನು ತುಂಡರಿಸಿಕೊಂಡು ಕಂದಕ್ಕಕ್ಕೆ ಬಿದ್ದಿದೆ.
ಬೆಂಗಳೂರಿನಿಂದ ಆಗಮಿಸಿದ್ದ ಕುಟುಂಬದವರು ದೇವರಮನೆ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಕಾರಿನಲ್ಲಿದ್ದವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವರಮನೆ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಅನೇಕ ಕಡೆ ಅಪಾಯಕಾರಿ ತಿರುವುಗಳಿವೆ. ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಬಣಕಲ್ ದೇವರಮನೆ ಮತ್ತು ಗುತ್ತಿ ದೇವರಮನೆ ರಸ್ತೆಗಳ ತಿರುವುಗಳಲ್ಲಿ ತಡೆಗೋಡೆ ನಿರ್ಮಿಸಬೇಕು ಮತ್ತು ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.