ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಕಾರ್ಮಿಕರೋರ್ವರು ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಕೂಲಿ ಕಾರ್ಮಿಕ ದೀಪಕ್ ರಾಯ್ (54) ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು.
ಶುಕ್ರವಾರ ಸಂಜೆ ಸುಮಾರು 4 ಗಂಟೆಯ ಸಮಯದಲ್ಲಿ ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಅಂಕಿಹಳ್ಳಿ ಸಮೀಪ ಈ ದುರ್ಘಟನೆ ನಡೆದಿದೆ.
ಗ್ರಾಮದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ದೀಪಕ್ ರಾಯ್ ಕೆಲಸ ಮುಗಿಸಿ ದಿನಸಿ ವಸ್ತುಗಳನ್ನು ಖರೀದಿಸಲು ಅಂಗಡಿಗೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡಬಂದ ಕಾಡಾನೆ ಏಕಾಏಕಿ ದಾಳಿ ನಡೆಸಿತ್ತು.
ದಾಳಿಯ ನಂತರ ಜೊತೆಗಿದ್ದವರ ನೆರವಿನಿಂದ ಚಿಕಿತ್ಸೆಗಾಗಿ ಸಕಲೇಶಪುರ ಕ್ರಾಪರ್ಡ್ ಆಸ್ಪತ್ರೆಗೆ ಕರೆತರಲಾಗಿತ್ತು.
ಆದರೆ ಗಾಯಗೊಂಡ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದ ರಿಂದ ವೈದ್ಯರ ಸಲಹೆ ಮೇರೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡುವ ಮೊದಲೇ ಕಾರ್ಮಿಕ ಸಾವನ್ನಪ್ಪಿದ್ದಾರೆ.
ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ಜನರು ಪ್ರಾಣಕಳೆದುಕೊಳ್ಳುತ್ತಿರುವ ಸರಣಿ ಪ್ರಕರಣಗಳು ನಡೆಯುತ್ತಲೇ ಇದ್ದು ಈಗ ಮತ್ತೊಂದು ಜೀವ ಬಲಿಯಾಗಿದೆ.