ರಾಜ್ಯ ಸರ್ಕಾರವು ಮೂಡಿಗೆರೆ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವುದಕ್ಕೆ ಕೃಷಿಕ ಸಮಾಜ ತಾಲ್ಲೂಕು ಘಟಕವು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಮೂಡಿಗೆರೆ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್. ಅಶೋಕ್ ಕುಮಾರ್ ಅವರು ಈ ಬಾರಿ ಮೂಡಿಗೆರೆ ತಾಲ್ಲೂಕಿನಲ್ಲಿ ಅತಿಕಡಿಮೆ ಮಳೆಯಾಗಿದೆ. ಇದರಿಂದ ಭತ್ತದ ಬೆಳೆ ಸೇರಿದಂತೆ ಈ ಭಾಗದಲ್ಲಿ ಬೆಳೆಯುವ ಎಲ್ಲಾ ಬೆಳೆಗಳ ಮೇಲೆ ಅದು ವ್ಯತಿರಿಕ್ತ ಪರಿಣಾಮ ಬೀರಿದೆ. ಇದರಿಂದ ರೈತರು ಬೆಳೆನಷ್ಟ ಅನುಭವಿಸುವಂತಾಗಿದೆ. ಈ ವರ್ಷ ವಾಡಿಕೆಗಿಂತ ಶೇಕಡಾ 40 ರಷ್ಟು ಮಳೆ ಕಡಿಮೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಅಪಾಯ ಎದುರಾಗಿದೆ.
ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದ ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಮೂಡಿಗೆರೆಯನ್ನು ಸೇರ್ಪಡೆ ಮಾಡಿರಲಿಲ್ಲ. ಆದರೆ ಕ್ಷೇತ್ರದ ಶಾಸಕರಾದ ನಯನ ಮೋಟಮ್ಮನವರು ಸರ್ಕಾರಕ್ಕೆ ಇಲ್ಲಿನ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಆಗಲು ಪ್ರಯತ್ನ ನಡೆಸಿದ್ದಾರೆ. ಕೃಷಿಕ ಸಮಾಜವು ಶಾಸಕಿ ನಯನ ಮೋಟಮ್ಮ ಅವರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ತಾಲ್ಲೂಕಿನ ಎಲ್ಲಾ ರೈತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತದೆ ಎಂದಿದ್ದಾರೆ. ಹಾಗೆಯೇ ಸರ್ಕಾರ ಆದಷ್ಟು ಬೇಗ ಮಳೆಯ ಕೊರತೆಯಿಂದ ಬೆಳೆನಷ್ಟ ಅನುಭವಿಸಿರುವ ರೈತರ ಖಾತೆಗಳಿಗೆ ಬರಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಲೆನಾಡು ಭಾಗದಲ್ಲಿ ರೈತರು ಕಾಡಾನೆ ಮತ್ತು ಕಾಡುಪ್ರಾಣಿಗಳಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕ್ರಮ ಜರುಗಿಸಬೇಕು. ಬೆಳೆನಷ್ಟಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.