ನಾಡು ಕಂಡ ಹಿರಿಯ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮಾಜಿ ಸಚಿವ, ಮಾಜಿ ಸಂಸದ ಡಿ.ಬಿ. ಚಂದ್ರೇಗೌಡರ ಶರೀರ ಪಂಚಭೂತಗಳಲ್ಲಿ ಲೀನಾವಾಗಿದೆ. ಮಂಗಳವಾರ ಮುಂಜಾನೆ ನಿಧರಾಗಿದ್ದ ಡಿ.ಬಿ.ಚಂದ್ರೇಗೌಡರು ಪಾರ್ಥೀವ ಶರೀರದ ಅಂತ್ಯಸಂಸ್ಕಾರ ಬುಧವಾರ ಮಧ್ಯಾಹ್ನ ನೆರವೇರಿತು.
ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಚಂದ್ರೇಗೌಡರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅವರ ಹಿರಿಯ ಪುತ್ರಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಚಂದ್ರೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು. ಬೆಂಗಳೂರಿನಿಂದ ನೇರ ದಾರದಹಳ್ಳಿಗೆ ಆಗಮಿಸಿದ ಸಿದ್ದರಾಮಯ್ಯನವರು ಚಂದ್ರೇಗೌಡರ ಪತ್ನಿ, ಮಕ್ಕಳು ಹಾಗೂ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಚಂದ್ರೇಗೌಡರ ಪಾರ್ಥೀವ ಶರೀರಕ್ಕೆ ಹೂಗುಚ್ಚ ಅರ್ಪಿಸಿ, ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಶಾಸಕರಾದ ಟಿ.ಡಿ.ರಾಜೇಗೌಡ, ಕೆ.ಎಸ್. ಆನಂದ್, ನಯನ ಮೋಟಮ್ಮ, ಜಿ.ಹೆಚ್. ಶ್ರೀನಿವಾಸ್, ಹೆಚ್.ಡಿ. ತಮ್ಮಯ್ಯ ಅಂತಿಮ ದರ್ಶನ ಪಡೆದರು.
ಬುಧವಾರ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಬಿ.ಜೆ.ಪಿ. ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಮಾಜಿ ಕೇಂದ್ರ ಸಚಿವೆ ಡಿ.ಕೆ. ತಾರಾದೇವಿ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಡಾ. ಆಂಶುಮಂತ್ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.