ಸಂವಿಧಾನದ ಬಗ್ಗೆ ಪ್ರತಿಯೊಬ್ಬ ಭಾರತೀಯರು ತಿಳಿದುಕೊಳ್ಳಬೇಕೆಂದು ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಅವರು ಬುಧವಾರ ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಸಂವಿಧಾನ ಜಾಗೃತಿ ರಥ ಯಾತ್ರೆ ಸ್ವಾಗತಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಭಾರತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಶ್ರೇಷ್ಟವಾಗಿದೆ. ಅದನ್ನು ಆಚರಣೆಗಳಿಗೆ ಸೀಮಿತಗೊಳಿಸದೇ ಪ್ರತಿ ಹಂತದಲ್ಲೂ ಸಂವಿಧಾನವನ್ನು ಅರಿತು ಗೌರವಿಸಬೇಕೆಂದು ಹೇಳಿದರು.
ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ಸಂವಿಧಾನವನ್ನು ಅಪ್ಪಿಕೊಳ್ಳುವುದರಿಂದ ನಮ್ಮ ರಕ್ಷಣೆಗೆ ಸಹಕಾರಿಯಾಗುತ್ತದೆ. ಕೇಲವ ಅಂಬೇಡ್ಕರ್ ಜಯಂತಿ, ಸಂವಿಧಾನ ದಿನಾಚರಣೆ ಮಾಡುವುದರಿಂದ ಎಲ್ಲರಿಗೂ ಸಂವಿಧಾನದ ಬಗ್ಗೆ ಜಾಗೃತಿ ಮೂಡುವುದಿಲ್ಲ. ಗ್ರಾ.ಪಂ. ಮಟ್ಟದಲ್ಲಿ ಹಳ್ಳಿಹಳ್ಳಿಗಳಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಸರಕಾರದ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು.
ಎಂ.ಎಸ್.ಅನಂತ್, ದೀಪಕ್ ದೊಡ್ಡಯ್ಯ, ಎಚ್.ಪಿ.ರಮೇಶ್, ಹಂಜಾ, ಯು.ಬಿ.ಮಂಜಯ್ಯ, ಲೋಕವಳ್ಳಿ ರಮೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.