ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಅಭಿವೃದ್ಧಿ ಶೂನ್ಯ ಜನದ್ರೋಹಿ ಬಜೆಟ್ ಆಗಿದೆ ಎಂದು ಜಿಲ್ಲಾ ವಕ್ತಾರ ಟಿ.ರಾಜಶೇಖರ್ ಟೀಕಿಸಿದ್ದಾರೆ
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ. ಎ.ನರೇಂದ್ರ ಹಾಗೂ ಜಿಲ್ಲಾ ವಕ್ತಾರ ಟಿ.ರಾಜಶೇಖರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ೧೫ನೇ ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಈ ಬಜೆಟ್ನಲ್ಲಿ ರಾಜ್ಯದ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆಂದು ಟೀಕಿಸಿದರು.
ರಾಜ್ಯದ ಅಭಿವೃದ್ಧಿಗಿಂತ ರಾಜಕೀಯ ಆರೋಪ ಮಾಡಿ, ಬಜೆಟ್ನ ಪಾವಿತ್ರತೆ ಹಾಳು ಮಾಡಿದ್ದಾರೆ. ಬಜೆಟ್ ಅಭಿವೃದ್ಧಿ ಶೂನ್ಯವಾಗಿದ್ದರಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರವನ್ನು ದೂಷಿಸುವ ಕೆಲಸ ಮಾಡಿದ್ದಾರೆಂದು ಆರೋಪಿಸಿದರು.
೩.೭೧೩೮೩ ಕೋಟಿ ಗಾತ್ರದ ಬಜೆಟ್ನಲ್ಲಿ ೧ ಲಕ್ಷ ಕೋಟಿಗಳ ಸಾಲದ ಹೊರೆ ಆಗುತ್ತದೆ. ಯಾವುದೇ ಹೊಸ ಯೋಜನೆಗಳನ್ನು ಪ್ರಸ್ತಾಪಿಸದೆ ರಾಜ್ಯ ಸರ್ಕಾರಕ್ಕೆ ಬರುವಂತ ವರಮಾನದ ಮೂಲ ತಿಳಿಸದಿರುವುದರಿಂದ ಮುಂದಿನ ದಿನಗಳಲ್ಲಿ ಎಲ್ಲಾ ತರಹದ ತೆರಿಗೆಳನ್ನು ಹೆಚ್ಚು ಮಾಡುವ ಲಕ್ಷಣಗಳು ಕಾಣುತ್ತಿವೆ ಎಂದರು.
ಈ ಬಜೆಟ್ನಲ್ಲಿ ಜಿಲ್ಲೆಗೆ ಯಾವುದೇ ಹೊಸ ಯೋಜನೆಗಳನ್ನು ಪ್ರಸ್ತಾಪಿಸಿಲ್ಲ. ಚಾಲ್ತಿಯಲ್ಲಿರುವ ಯೋಜನೆಗಳಿಗೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಮಾನವ ವನ್ಯಪ್ರಾಣಿ ಸಂಘರ್ಷ, ಒತ್ತುವರಿ ಸಮಸ್ಯೆ ಸೇರಿದಂತೆ ಯಾವುದೇ ಯೋಜನೆಗಳನ್ನು ಬಜೆಟ್ನಲ್ಲಿ ಸೇರಿಸಿರುವುದಿಲ್ಲ. ಜಿಲ್ಲೆಯ ೫ ಜನ ಶಾಸಕರಿಗೆ ಕ್ಷೇತ್ರದ ಬಗ್ಗೆ ಕಿಂಚಿತ್ತೂ ಕಾಳಜಿ ಮತ್ತು ಆಸಕ್ತಿ ಇಲ್ಲದಂತೆ ಕಾಣುತ್ತಿದೆ ಎಂದು ದೂರಿದರು.
ಕಾಫಿಯನ್ನು ಬ್ರಾಂಡಿಂಗ್ ಮಾಡಿ, ಅಂತರಾಷ್ಟ್ರೀಯ ಮಾರುಕಟ್ಟೆ ಮಾಡುವಲ್ಲಿ ಯಾವುದೇ ಪ್ರಸ್ತಾಪ ಇಲ್ಲ. ಜಿಲ್ಲೆಗೆ ಪ್ರತ್ಯೇಕ ವಿಶ್ವವಿದ್ಯಾಲಯ, ಪ್ರತ್ಯೇಕ ಹಾಲು ಒಕ್ಕೂಟ, ಪ್ರವಾಸೋದ್ಯಮ ಯಾವುದೇ ಅಭಿವೃದ್ಧಿಗೆ ಕಾಳಜಿ ವಹಿಸದೆ ಒಟ್ಟಾರೆ ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ದ್ರೋಹ ಮಾಡಿ, ನಿರ್ಲಕ್ಷ್ಯ ಎದ್ದು ಕಾಣುತಿದ್ದು ಇದಕ್ಕೂ ಐವರು ಶಾಸಕರ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಮಧುಕುಮಾರ್ ರಾಜ್ ಅರಸ್, ಪುಷ್ಪರಾಜ್, ಸಚಿನ್ ಇದ್ದರು.