ಬೆಂಗಳೂರು ಮಹಾನಗರದಲ್ಲಿ ಬಾಂಬ್ ಸ್ಪೋಟವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಂಗಳೂರು ನಗರದ ಪ್ರಸಿದ್ಧ ಹೋಟೆಲ್ ಗಳಲ್ಲಿ ಒಂದಾದ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ.
ಆರಂಭದಲ್ಲಿ ಇದನ್ನು ಗ್ಯಾಸ್ ಸಿಲಿಂಡರ್ ಸ್ಫೋಟ ಎಂದು ಶಂಕಿಸಲಾಗಿತ್ತು. ಆದರೆ ಅದು ಬಾಂಬ್ ಸ್ಫೋಟ ಎಂಬುದು ನಂತರ ದೃಢವಾಗಿದೆ. ಈ ಬಗ್ಗೆ ಡಿಜಿಪಿ ಅಲೋಕ್ ಮೋಹನ್ ಮಾಹಿತಿ ನೀಡಿದ್ದು, ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಸ್ಫೋಟವನ್ನು ಬಾಂಬ್ ಸ್ಫೋಟ ಎಂದು ಸ್ಪಷ್ಟಪಡಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ಘಟನೆ ಹಿಂದಿರುವವರು ಶೀಘ್ರದಲ್ಲಿಯೇ ಪೊಲೀಸರು ಬಂಧಿಸಲಿದ್ದಾರೆ ಎಂದು ತಿಳಿಸಿದರು.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ತನಿಖೆ ನಡೆಸುತ್ತಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದೆ. ನಗರ ಪೊಲೀಸ್ ಆಯುಕ್ತರು ಮತ್ತಿತರ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಈ ಕೃತ್ಯವೆಸಗಿರುವ ದುಷ್ಕರ್ಮಿಗಳನ್ನು ಖಂಡಿತವಾಗಿಯೂ ಪತ್ತೆ ಹಚ್ಚಲಾಗುವುದು ಎಂದರು.
ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ತನಿಖೆ ನಡೆಯುತ್ತಿದೆ. ಎಫ್ಎಸ್ ಎಲ್ ತಂಡದಲ್ಲಿ ವರದಿ ಸ್ವೀಕಾರದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸ್ ,ಅಗ್ನಿಶಾಮಕ ತಂಡಗಳು ಸ್ಫೋಟದ ಸ್ಥಳಕ್ಕೆ ಧಾವಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ. ಒಡೆದ ಗಾಜು ಮತ್ತು ಪೀಠೋಪಕರಣಗಳು ಚೆಲ್ಲಾಪಿಲ್ಲಿಯಾಗಿ ಕೆಫೆಯ ನೆಲದ ಮೇಲೆ ಬಿದ್ದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯ ತಂಡವು ಸ್ಫೋಟದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಶ್ವಾನ ದಳವನ್ನು ನಿಯೋಜಿಸಲಾಗಿದೆ.
ಘಟನೆ ನಡೆದಾಗ ಸ್ಥಳದಲ್ಲಿದ್ದ ಕೆಫೆಯ ಸೆಕ್ಯೂರಿಟಿ ಗಾರ್ಡ್, ಘಟನೆ ಕುರಿತು ವಿವರಿಸಿದರು. ಕೆಫೆ ಹೊರಗಡೆ ನಿಂತಿದಾಗ, ಅನೇಕ ಗ್ರಾಹಕರು ಹೋಟೆಲ್ ಗೆ ಬಂದಿದ್ದರು.ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಹಾಗೂ ಬೆಂಕಿ ಕಾಣಿಸಿಕೊಂಡಿತ್ತು. ನೋಡನೋಡುತ್ತಿದ್ದಂತೆ ಹೋಟೆಲ್ ಒಳಗಿದ್ದ ಗ್ರಾಹಕರು ಗಾಯಗೊಂಡರು ಎಂದು ತಿಳಿಸಿದರು.
ಈ ಮಧ್ಯೆ ಮೈಸೂರಿನಲ್ಲಿ ಘಟನೆ ಕುರಿತು ಪ್ರತಿಕ್ರಿಸಿರುವ ಸಿಎಂ ಸಿದ್ದರಾಮಯ್ಯ, ಸ್ಫೋಟದ ಕಾರಣ ಮತ್ತು ಸ್ವರೂಪವನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ಮತ್ತು ಇದು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಕಂಡುಬಂದಿದ್ದು, ಇದರಲ್ಲಿ ಭಾಗಿಯಾಗಿರುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಧ್ಯಾಹ್ನ 12 ಗಂಟೆಯ ನಂತರ ಯಾರೋ ಒಬ್ಬರು ಬ್ಯಾಗ್ ಇಟ್ಟು ಹೋಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ಘಟನೆ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಗಾಯಾಳುಗಳೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.