ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಡಿಕೆಶಿ ಅವರು ಜಯಪ್ರಕಾಶ್ ಹೆಗ್ಡೆ, ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು, ಹಿಂದಿನ ಕೆಲ ಕಹಿ ಘಟನೆಗಳನ್ನು ಮರೆತು ಸಿಹಿ ಘಟನೆಗಳೊಂದಿಗೆ ಮುಂದುವರೆಯಬೇಕು. ಅದಕ್ಕಾಗಿ ನಾನು ಬಂದಿದ್ದೇನೆ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ಮನೆ ಮನೆಗೆ ಹೋಗಿ ನೆನಪು ಮಾಡಿಕೊಡಬೇಕು. ಈ ಹಿಂದೆ ಮೀನುಗಾರರಿಗೆ ಸಬ್ಸಿಡಿ ನಾನು ಕೊಡಿಸಿದ್ದೆ. ಅದನ್ನು ಪುನಃ ನೆನಪು ಮಾಡಿಕೊಡಬೇಕು ಎಂದು ಹೇಳಿದರು.
ಇದರೊಂದಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್ ಹೆಗ್ಡೆಯವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಟಿಕೆಟ್ ಘೋಷಣೆ ಮಾತ್ರ ಬಾಕಿ ಇದೆ.
ಕೆ. ಜಯಪ್ರಕಾಶ್ ಹೆಗ್ಡೆಯವರು ಈ ಹಿಂದೆಯೂ ಒಮ್ಮೆ ಕಾಂಗ್ರೇಸ್ ಪಕ್ಷದಿಂದ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಬಿ.ಜೆ.ಪಿ. ಸೇರ್ಪಡೆಯಾಗಿದ್ದರು. ಈಗ ಮರಳಿ ಕಾಂಗ್ರೇಸ್ ಪಕ್ಷವನ್ನು ಸೇರಿದ್ದಾರೆ.