ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರ್ಟ್ ಮುಂದೆ ವಿಚಾರಣೆಗೆ ಹಾಜರುಪಡಿಸಿತು.
ಹೆಚ್ಚಿನ ವಿಚಾರಣೆಗೆ 15 ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಎಸ್ ಐಟಿ ಕೇಳಿತ್ತು, ವಾದ–ವಿವಾದ ಆಲಿಸಿದ ನ್ಯಾಯಾಲಯ 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.
ಎಸ್ ಐಟಿ ಪರ ನ್ಯಾಯವಾದಿಗಳು ಮತ್ತು ಪ್ರಜ್ವಲ್ ಪರ ವಕೀಲ ಅರುಣ್ ಮಂಡಿಸಿದ ವಾದ–ವಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಹೆಚ್ಚಿನ ವಿಚಾರಣೆಗಾಗಿ ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೊಪ್ಪಿಸಿದರು.
ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ಇದೀಗ ಜೂನ್ 4 ರಂದು ಪ್ರಕಟವಾಗುವ ಚುನಾವಣಾ ಫಲಿತಾಂಶವನ್ನು ಎಸ್.ಐ.ಟಿ. ಕಸ್ಟಡಿಯಲ್ಲಿದ್ದುಕೊಂಡೇ ತಿಳಿಯಬೇಕಾದ ಅನಿವಾರ್ಯತೆಯಲ್ಲಿ ಪ್ರಜ್ವಲ್ ಸಿಲುಕಿದ್ದಾರೆ.
ಸದ್ಯದಲ್ಲಿಯೇ ಪ್ರಜ್ವಲ್ಗೆ ಪುರುಷ ಸಾಮರ್ಥ್ಯ ಪರೀಕ್ಷೆ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.