ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು.
ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಸರಕಾರ ಬದ್ಧವಾಗಿದೆ,” ಎಂದು ತಿಳಿಸಿದರು.