ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಭದ್ರಾ ಹುಲಿ ಸಂರಕ್ಷಿತ ಪ್ರದೇಶವಾದ ತಣಿಗೆಬೈಲು ಉಪ ಅರಣ್ಯ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳುವ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ದೊಡ್ಡ ಹಗರಣ ನಡೆದಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಆರೋಪಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಣಿಗೆಬೈಲು ಅರಣ್ಯ ವಲಯದಲ್ಲಿ 300 ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ, ಮಾರಣ ಹೋಮ ನಡೆಸಲಾಗಿದೆ ಎಂದು ಹೇಳಿದರು.
ಈ ಬಗ್ಗೆ ಆರ್ಟಿಐ ಕಾಯಿದೆ ಮೂಲಕ ಕೆ.ಕೆ ಸುಬ್ಬಯ್ಯ ಎಂಬುವವರು ಮಾಹಿತಿ ಪಡೆದು ದಾಖಲೆ ಸಹಿತ ಮುಖ್ಯಮಂತ್ರಿಗಳಿಗೆ, ಅರಣ್ಯ ಸಚಿವರಿಗೆ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ತಾವು ಸಲ್ಲಿಸಿದ ದೂರಿನ ಆಧಾರದಲ್ಲಿ ಅರಣ್ಯ ರಕ್ಷಕ ಹಾಗೂ ಗಸ್ತು ಸೇವಕ ಇಬ್ಬರೂ ಕೆಳ ಹಂತದ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ, ಇಷ್ಟೊಂದು ದೊಡ್ಡ ಹಗರಣ ನಡೆಯಲು ಮೇಲಾಧಿಕಾರಿಗಳ ಸಹಕಾರವಿಲ್ಲದೆ ಸಾಧ್ಯವಿರುವುದಿಲ್ಲ, ಇಲಾಖೆಯ ಮುಖ್ಯಸ್ಥರಾಗಿರುವ ವಲಯ ಅರಣ್ಯಾಧಿಕಾರಿ ಕುಮಾರಿ ಸಂಗೀತ ಅವರು ಪೂರ್ಣ ಸೂತ್ರದಾರಿ ಆಗಿದ್ದು, ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮಗಳು ನಡೆದಾಗ ಮೇಲಾಧಿಕಾರಿಗಳು ಹೊಣೆಗಾರರಾಗುತ್ತಾರೆ. ಕೆಳಮಟ್ಟದ ನೌಕರರನ್ನು ಅಮಾನತುಗೊಳಿಸುವ ಮೂಲಕ ಈ ಅಕ್ರಮವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಇನ್ನೊಂದು ವಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ವಿವಿಧ ದಲಿತಪರ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ತಣಿಗೆ ಬೈಲು ನಿವಾಸಿ ಮಂಜುನಾಥ್, ತರೀಕೆರೆಯ ಅರುಳ್ ಪ್ರಕಾಶ್, ಕಿರಣ್ ಇದ್ದರು.