ಡೆಂಗ್ಯೂ ಜ್ವರ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಜನಸಾಮಾನ್ಯರು ಕೂಡ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಹಕರಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್ ಮೀನಾನಾಗರಾಜ್ ಮನವಿ ಮಾಡಿದರು.
ಡೆಂಗ್ಯೂ ಪ್ರಯುಕ್ತ ಜಿಲ್ಲಾಡಳಿತ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಇಂದು ನಗರದ ದೋಣಿಕಣ ಬಡಾವಣೆಯಲ್ಲಿ ಸಾರ್ವಜನಿಕರನ್ನು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರು ಹೊರತುಪಡಿಸಿ, ಅತಿ ಹೆಚ್ಚು ಪ್ರಕರಣ ದಾಖಲಾಗಿರುವುದು ಈ ಜಿಲ್ಲೆಯಾಗಿದ್ದು, ಆರೋಗ್ಯ ಸಚಿವರ ಸೂಚನೆಯಂತೆ ಡೆಂಗ್ಯೂ ತಡೆಗಟ್ಟಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈಗಾಗಲೇ ಜಿಲ್ಲಾಡಳಿತ ಎಲ್ಲಾ ತಾಲೂಕುಗಳಲ್ಲಿ ಏಕಕಾಲದಲ್ಲಿ ಡೆಂಗ್ಯೂ ಸೊಳ್ಳೆ ನಿಯಂತ್ರಣಕ್ಕೆ ಲಾರ್ವಾ ಸರ್ವೆ ಸೇರಿದಂತೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ, ಪ್ರತಿ ಶುಕ್ರವಾರ ಹಾಗೂ ಶನಿವಾರ ಗ್ರಾಮ ಪಂಚಾಯಿತಿಯಿಂದ ನಗರ ಪ್ರದೇಶದ ಎಲ್ಲಾ ಕಡೆ ಸ್ವಚ್ಛತಾ ದಿನ ಎಂಬ ಕಾರ್ಯಕ್ರಮದಡಿ ಜನಸಾಮಾನ್ಯರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಆರೋಗ್ಯ ಇಲಾಖೆ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಕಾರ್ಯಕರ್ತರೊಂದಿಗೆ ಪ್ರತೀ ಮನೆಮನೆಗೆ ತೆರಳಿ ಚರಂಡಿ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ, ನೀರು ಸಂಗ್ರಹವಾಗದಂತೆ ಮುಂಜಾಗ್ರತೆವಹಿಸಿ ಟ್ಯಾಂಕ್, ಡ್ರಮ್, ನೀರು ಗುಂಡಿಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸುರಕ್ಷಿತ ಕ್ರಮ ಅನುಸರಿಸುವಂತೆ ತಿಳುವಳಿಕೆ ಮೂಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯೊಂದಿಗೆ ನಾಗರೀಕರು ಕೈ ಜೋಡಿಸಿದಾಗ ಇಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಾಧ್ಯ ಎಂದ ಅವರು. ಆರೋಗ್ಯ ಇಲಾಖೆ ಸೂಚನೆಯಂತೆ ತಮ್ಮ ಮನೆಗಳ ಸುತ್ತ-ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಬಾಲಕೃಷ್ಣ, ಡಾ. ಮಂಜುನಾಥ್, ಡಾ. ಭರತ್, ಡಾ. ನಾಗರಾಜ್, ರೇಣುಕಾಸ್ವಾಮಿ, ನಗರಸಭೆ ಪೌರಾಯುಕ್ತ ಬಿ.ಸಿ ಬಸವರಾಜ್, ಡಾ. ದಿವ್ಯಶ್ರೀ ಮತ್ತಿತರರಿದ್ದರು.