ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿ ಹಾಗೂ ದತ್ತಪೀಠದ ಪ್ರವೇಶಕ್ಕೆ ಪ್ರವಾಸಿಗರಿಗೆ ಇನ್ನೊಂದು ವಾರ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮುಳ್ಳಯ್ಯನಗಿರಿ ಭಾಗದಲ್ಲಿ ಗುಡ್ಡ ಕುಸಿತ ಹೆಚ್ಚಾಗಿದೆ. ಜೊತೆಗೆ ಗಿರಿ ಪ್ರದೇಶಕ್ಕೆ ತೆರಳುವ ರಸ್ತೆಗಳಲ್ಲಿ ಕೊರಕಲುಗಳು ಬಿದ್ದಿವೆ. ಹೀಗಾಗಿ ಗುಡ್ಡ ಕುಸಿತವಾದ ಮಣ್ಣನ್ನು ತೆರವುಗೊಳಿಸಲು ಹಾಗೂ ರಸ್ತೆ ದುರಸ್ತಿ ಮಾಡಲು ಇನ್ನೊಂದು ವಾರ ಬೇಕು ಎಂದು ಪಿಡಬ್ಲ್ಯುಡಿ ಅಧಿಕಾರಿಗಳು ತಿಳಿಸಿರುವುದರಿಂದಾಗಿ ಗಿರಿ ಪ್ರದೇಶಕ್ಕೆ ಇನ್ನೊಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಪ್ರವಾಸಿಗರು ಸುರಿಯುತ್ತಿರುವ ಮಳೆಯಲ್ಲಿ ಜಿಲ್ಲೆಗೆ ಪ್ರವಾಸಕ್ಕೆ ಬರಬಾರದು ಎಂದು ಮನವಿ ಮಾಡುವುದಾಗಿ ತಿಳಿಸಿದರು.
ಚಾರ್ಮಾಡಿ ಘಾಟಿಯಲ್ಲಿ ಸಂಚಾರ ನಿಯಂತ್ರಣ:
ಸಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಶಿರಡಿ ಘಾಟಿಯಲ್ಲಿ ಹಗಲು ಸಂಚಾರಕ್ಕೆ ಅವಕಾಶವಿರುವುದೆ. ಹೀಗಾಗಿ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರದಟ್ಟಣೆ ಹೆಚ್ಚಾಗುತ್ತಿದೆ ತಿಳಿಸಿದರು.
ಈಗಾಗಲೇ ಚಾರ್ಮಾಡಿ ಘಾಟಿಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ, ಜೊತೆಗೆ ಹಾಸನ, ಉಡುಪಿ, ಮಂಗಳೂರು ಜಿಲ್ಲಾಧಿಕಾರಿಗಳ ಜೊತೆಯೂ ಚರ್ಚೆ ಮಾಡಿದ್ದೇವೆ. ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಲಿ ಕೊಟ್ಟಿಗೆಹಾರದಲ್ಲಿರುವ ಚೆಕ್ ಪೋಸ್ಟ್ ಬಳಿಯೇ ವಾಹನಗಳನ್ನು ನಿಯಂತ್ರಿಸಲಾಗುತ್ತದೆ ಹಾಗೂ ನಿಯಮಿತ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.