ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತದಲ್ಲಿ ನೂರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತಿದೆ. ಇಂದು ನಸುಕಿನ ಜಾವ ಭಾರೀ ಮಳೆಯಿಂದ ಭೂಕುಸಿತ ಮತ್ತು ಪ್ರವಾಹ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ.
ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ.
ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿ ಆರ್ ಹೇಳಿದ್ದಾರೆ.
ಸರ್ಕಾರಿ ಸಂಸ್ಥೆಗಳ ಜೊತೆಗೆ ಸ್ವಯಂಸೇವಕರು ಮತ್ತು ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸುತ್ತಿದ್ದಾರೆ. ಕರಮಂತೋಡು ನದಿಯ ಬಾಣಾಸುರ ಸಾಗರ ಅಣೆಕಟ್ಟಿನ ಶೆಟರ್ ನ್ನು ತೆರೆಯಲಾಗಿದ್ದು, ಕೆಳಭಾಗ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅನೇಕ ಸವಾಲುಗಳನ್ನು ಎದುರಿಸುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಲಿಕಾಪ್ಟರ್ಗಳಲ್ಲದೆ ಎನ್ಡಿಆರ್ಎಫ್ ತಂಡ ಮತ್ತು ಸೇನಾ ಘಟಕಗಳು ದಾರಿಯಲ್ಲಿವೆ ಎಂದು ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿಆರ್ ಹೇಳಿದ್ದಾರೆ.