ಮಲೆನಾಡು ಭಾಗದ ರೈತರು ಬಹಳಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಪರವಾಗಿ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತುವಂತೆ ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗ್ರೀನ್ ಆರ್ಮಿ ಇಂಡಿಯಾ ಮೂಡಿಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಶುಕ್ರವಾರ ಮೂಡಿಗೆರೆ ತಾಲ್ಲೂಕಿನಲ್ಲಿ ಅತಿವೃಷ್ಟಿ ಅನಾಹುತ ವೀಕ್ಷಣೆಗೆಂದು ಬಂದಿದ್ದ ಬಿ.ಜೆ.ಪಿ. ನಿಯೋಗದ ನೇತೃತ್ವ ವಹಿಸಿದ್ದ ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಿಯೋಗ ಮಲೆನಾಡಿನ ರೈತರು ಎದುರಿಸುತ್ತಿರುವ ಕಾಡಾನೆ, ಕಾಡುಪ್ರಾಣಿಗಳ ಹಾವಳಿ ಸಮಸ್ಯೆ, ಅತಿವೃಷ್ಟಿ, ಭೂಕುಸಿತ, ಬೆಳೆಹಾನಿ ಮುಂತಾದ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.
ನಿರಂತರ ಸಮಸ್ಯೆ ಸೃಷ್ಟಿಸುತ್ತಿರುವ ಕಾಡಾನೆಗಳ ಸ್ಥಳಾಂತರ, ಕಾಡಾನೆ ಕಾಡು ಪ್ರಾಣಿಗಳು ರೈತರ ಜಮೀನಿಗೆ ಬರದಂತೆ ಸೂಕ್ತ ಕ್ರಮ ಜರುಗಿಸುವುದು, ಕಾಡು ಪ್ರಾಣಿಗಳಿಂದ ಆಗುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರ ನೀಡುವುದು. ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ಪಹಣಿ ದೋಷದಿಂದ ರೈತರು ಬೆಳೆವಿಮೆ ಕಟ್ಟುವಲ್ಲಿ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವುದು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ರೈತ ಸಂಘದ ಪದಾಧಿಕಾರಿಗಳು ಬಿ.ಜೆ.ಪಿ. ನಿಯೋಗದ ಗಮನ ಸೆಳೆದಿದ್ದಾರೆ.
ನಿಯೋಗದಲ್ಲಿ ತಾಲ್ಲೂಕು ಅಧ್ಯಕ್ಷ ಎಸ್.ಪಿ. ರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಸಿ. ದಯಾಕರ್, ಜಿಲ್ಲಾ ಉಪಾಧ್ಯಕ್ಷ ಪಿ.ಕೆ. ನಾಗೇಶ್ ಮುಂತಾದವರು ಇದ್ದರು.
ಈ ಸಂದರ್ಭದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ದೇವರುಂದ, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಉಪಸ್ಥಿತರಿದ್ದರು.