ಕಸ್ತೂರಿ ರಂಗನ್ ವರದಿ ವಿರೋಧಿಸಿ ಊರುಬಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಶುಕ್ರವಾರ ಊರುಬಗೆಯಲ್ಲಿ ನಡೆದ ಗ್ರಾಮಸಭೆಯ ಸಂದರ್ಭದಲ್ಲಿ ಗ್ರಾಮಸ್ಥರು ಕಸ್ತೂರಿ ರಂಗನ್ ವರದಿ ವಿರೋಧಿಸಿ ಘೋಷಣೆಗಳನ್ನು ಕೂಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದು, ಯಾವುದೆ ಕಾರಣಕ್ಕೂ ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬಾರದು, ಒಂದು ವೇಳೆ ವರದಿಯನ್ನು ಜಾರಿಗೆ ತರುವುದಾದರೂ ಜನವಸತಿ ಪ್ರದೇಶಗಳನ್ನು ವ್ಯಾಪ್ತಿಯಿಂದ ಹೊರಗಿಟ್ಟು ಅನುಷ್ಟಾನಕ್ಕೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜುಲೈ ಅಂತ್ಯಕ್ಕೆ ಸುಮಾರು 250 ಇಂಚು ಮಳೆಯಾಗಿದೆ. ಅತಿವೃಷ್ಟಿಯಿಂದ ಕಾಫಿ ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಈ ಪ್ರದೇಶವನ್ನು ಅತಿವೃಷ್ಟಿ ಪ್ರದೇಶ ಎಂದು ಘೋಷಣೆ ಮಾಡಿ ವಿಶೇಷ ಪ್ಯಾಕೇಜ್ ನೀಡಬೇಕು.
ಅರಣ್ಯ ಒತ್ತುವರಿ ತೆರವಿಗೆ ಸರ್ಕಾರ ಆದೇಶ ಮಾಡಿದೆ. ಈ ಭಾಗದಲ್ಲಿ ಅನೇಕ ಜನ ಡೀಮ್ಡ್ ಫಾರೆಸ್ಟ್ ನಲ್ಲಿ ಮನೆ ನಿರ್ಮಿಸಿ ವಾಸ ಮಾಡುತ್ತಿದ್ದಾರೆ. ಮನೆಯ ಹಕ್ಕುಪತ್ರಕ್ಕಾಗಿ 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ ಸಾಗುವಳಿ ಮಾಡಿರುವ ಸರ್ಕಾರಿ ಜಮೀನಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಹಿಂದೆ ಗೋಮಾಳ, ಕಂದಾಯ ಭೂಮಿ ಎಂದು ಇದ್ದಿದ್ದನ್ನು ಡೀಮ್ಡ್ ಫಾರೆಸ್ಟ್ ಎಂದು ಬದಲಿಸಲಾಗಿದೆ. ಇದರಿಂದ ಅಲ್ಪಸ್ವಲ್ಪ ಒತ್ತುವರಿ ಮಾಡಿ ಕೃಷಿ ಮಾಡಿರುವ ರೈತರಿಗೆ ತೊಂದರೆ ಆಗಿದೆ ಇದನ್ನು ಬದಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಊರುಬಗೆ ಭಾಗದಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದ್ದು, ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಹಿಡಿದು ಬೇರೆಡೆ ಸಾಗಿಸಬೇಕು. ಈ ಹಿಂದೆ ಅರ್ಜುನ್ ಎಂಬುವವರನ್ನು ಕಾಡಾನೆ ತುಳಿದು ಸಾಯಿಸಿದ್ದಾಗ ನಡೆದ ಪ್ರತಿಭಟನೆಯಲ್ಲಿ ಹಲವರ ಮೇಲೆ ಹಾಕಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು.
ಶಿರಾಡಿ ಮತ್ತು ಚಾರ್ಮಾಡಿ ರಸ್ತೆಯಲ್ಲಿ ಭೂಕುಸಿತದಿಂದ ಸಂಚಾರಕ್ಕೆ ತೊಂದರೆಯಾಗುತ್ತಿರುವುದರಿಂದ ಪರ್ಯಾಯವಾಗಿ ಶಿಶಿಲ ಭೈರಾಪುರ ನಡುವಿನ ಯೋಜಿತ ರಸ್ತೆಯ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ತಮ್ಮ ಮನವಿಯಲ್ಲಿ ಒತ್ತಾಯಿಸಿದ್ದಾರೆ.