ಮೂಡಿಗೆರೆ ತಾಲ್ಲೂಕಿನ ಕೂವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಬ್ಗಲ್ ಗ್ರಾಮದಲ್ಲಿ ಭೂ ಒತ್ತುವರಿ ತೆರವು ವಿರುದ್ಧದ ಹೋರಾಟದ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು.
ಶುಕ್ರವಾರ ನಡೆದ ಸಭೆಯಲ್ಲಿ ಈ ಭಾಗದ ನೂರಾರು ರೈತರು ಭಾಗವಹಿಸಿದ್ದರು. ಇತ್ತೀಚೆಗೆ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ಹೆಸರಿನಲ್ಲಿ ರೈತರು ಸಾಗುವಳಿ ಮಾಡಿರುವ ಕಾಫಿ ಮುಂತಾದ ಬೆಳೆಗಳನ್ನು ಕಡಿಯುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಕೂವೆ ಭಾಗದಲ್ಲಿ ಕೃಷಿಕರೊಬ್ಬರು ಸಾಗುವಳಿ ಮಾಡಿದ್ದ ಕಾಫಿ ತೋಟವನ್ನು ಅರಣ್ಯ ಇಲಾಖೆ ಒತ್ತುವರಿ ತೆರವು ಹೆಸರಿನಲ್ಲಿ ಕಡಿದು ಹಾಕಿರುವುದರ ಬಗ್ಗೆ ಸಭೆಯಲ್ಲಿ ಭಾಗವಹಿಸಿದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಇಲಾಖೆ ಅಲ್ಪಸ್ವಲ್ಪ ಒತ್ತುವರಿ ಮಾಡಿ ಕೃಷಿ ಮಾಡಿರುವ ಸಣ್ಣ ರೈತರ ಜಮೀನು ಬಿಡಿಸಲು ಮುಂದಾಗಿರುವುದರ ವಿರುದ್ಧ ಸಂಘಟಿತರಾಗಿ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೇ ನಡೆಸದೇ, ಗಡಿಗುರುತು ಮಾಡದೇ, ಯಾವುದೇ ನೋಟೀಸ್ ನೀಡದೇ ರೈತರು ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿರುವ ಜಮೀನನ್ನು ಯಾವುದೇ ಕಾರಣಕ್ಕೂ ಬಿಡಿಸಲು ಸರ್ಕಾರ ಮುಂದಾಗಬಾರದು ಒಂದು ಸಭೆಯಲ್ಲಿ ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಈ ಬಗ್ಗೆ ಹೋರಾಟ ರೂಪಿಸಲು ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಸೇರಿದಂತೆ ಈ ಭಾಗದ ವಿವಿಧ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು, ರೈತರು ಭಾಗವಹಿಸಿ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.