ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದರಿಂದ ರೊಚ್ಚಿಗೆದ್ದ ಜಿಲ್ಲಾಸ್ತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ವೈದ್ಯರು ಮತ್ತು ಸಿಬ್ಬಂದಿ ಓಪಿಡಿ ಬಂದ್ ಮಾಡಿ ಅಕ್ರೋಶ ಹೊರಹಾಕುತ್ತಿದ್ದು, ವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆಯಿಂದ ಆಸ್ಪತ್ರೆಗೆ ಬಂದಿದ್ದ ರೋಗಿಗಳು ಪರದಾಡುವಂತಾಗಿದೆ.
ಆಸ್ಪತ್ರೆಯ ಮೂಳೆ ತಜ್ಞ ಡಾ. ವೆಂಕಟೇಶ್ ಎಂಬುವವರ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ್ದು, ಶರ್ಟ್, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿರುವ ಘಟನೆ ನಡೆದಿದೆ. ಹಲ್ಲೆ ನಡೆಸಿರುವ ಮಹಿಳೆಯನ್ನು ಚಿಕ್ಕಮಗಳೂರು ನಗರದ ತಸ್ಲೀಂ ಎಂದು ಗುರುತಿಸಲಾಗಿದೆ.
ಇದರಿಂದ ರೊಚ್ಚಿಗೆದ್ದ ಆಸ್ಪತ್ರೆ ಸಿಬ್ಬಂದಿ ತಮಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬ ಆಸ್ಪತ್ರೆಗೆ ಬಂದಿದ್ದ ಎನ್ನಲಾಗಿದೆ. ಆತನ ಚಿಕಿತ್ಸೆಗೆ ಸಂಬಂಧಿಸಿದಂತೆ ಆತನ ಜೊತೆ ಬಂದಿದ್ದ ಮಹಿಳೆಯೊಬ್ಬರು ವೈದ್ಯರ ಜೊತೆ ವಾಗ್ವಾದ ನಡೆಸಿದ್ದು, ವೈದ್ಯರ ಮೇಲೆ ಚಪ್ಪಲಿಯಿಂದ ಹೊಡೆದಿದ್ದಾರೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದೆ.
ಓಪಿಡಿ ಬಂದ್ ಮಾಡಿ ನ್ಯಾಯ ಕೊಡಿಸುವಂತೆ ಅಸ್ಪತ್ರೆ ಸಿಬ್ಬಂದಿಗಳು ಮೆರವಣಿಗೆ ನಡೆಸಿ ಚಿಕ್ಕಮಗಳೂರು ನಗರ ಠಾಣೆ ಎದುರು ಜಮಾಯಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿಗೆ ಇತರೆ ಕೆಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇದರಿಂದ ಚಿಕ್ಕಮಗಳೂರು ನಗರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.