ಚಿಕ್ಕಮಗಳೂರಿನಿಂದ ಬೇಲೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ಹಾಗೂ ಚಿಕ್ಕಮಗಳೂರು ನಗರದ ರಿಂಗ್ ರಸ್ತೆ ಯೋಜನೆಯ ಕುರಿತು ಶನಿವಾರ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಶಾಸಕರಾದ ಮಾಜಿ ಸಚಿವ ಡಾ. ಸಿ. ಟಿ. ರವಿ ಅವರು ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಎಂಜಿನಿಯರುಗಳೊಂದಿಗೆ ಸಭೆ ನಡೆಸಿದರು.
ಪಿಪಿಟಿ ಪ್ರದರ್ಶನದ ಮೂಲಕ ಎಂಜಿನಿಯರುಗಳೊಂದಿಗೆ ಚರ್ಚಿಸಿದಾರಲ್ಲದೆ ರಾಷ್ಟ್ರೀಯ ಹೆದ್ದಾರಿ ಮತ್ತು ರಿಂಗ್ ರಸ್ತೆ ಸಾಗುವ ಮಾರ್ಗಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಾ. ಸಿ. ಟಿ. ರವಿ ಮಾತನಾಡಿ, ಹೆದ್ದಾರಿ ಸಾಗುವ ಮಾರ್ಗದ ಹಳ್ಳಿಗಳ ಜನ, ಜಾನುವಾರುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹೆದ್ದಾರಿ ಮಾರ್ಗದ ಹಳ್ಳಿಗಳ ರಸ್ತೆ ಬದಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಅಗತ್ಯ ಇರುವ ಹಳ್ಳಿಗಳಲ್ಲಿ ಜನ ಜಾನುವಾರುಗಳ ಸಂಚಾರಕ್ಕೆ ಅನುಕೂಲ ಆಗುವಂತೆ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಸೂಚಿಸಿದರು.
ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಮಾತನಾಡಿ, ಮುಂದಿನ ಸಭೆಯೊಳಗೆ ಯೋಜನೆಗೆ ಸಂಬಂದಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ ಜಯಣ್ಣ ಹಾಗೂ ತಾಂತ್ರಿಕ ಸಿಬ್ಬಂದಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್, ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಭಾಗವಹಿಸಿದ್ದರು.