ಸಮಾನ ಮನಸ್ಕರ ವೇದಿಕೆ ವತಿಯಿಂದ ಡಿಸೆಂಬರ್ 8ರಂದು ಮಧ್ಯಾಹ್ನ 3 ಗಂಟೆಗೆ ಮೂಡಿಗೆರೆ ಪಟ್ಟಣದ ಜೇಸಿ ಭವನದಲ್ಲಿ ಮಾಜಿ ಸಚಿವ, ಹಿರಿಯ ರಾಜಕಾರಣಿ ದಿವಂಗತ ಡಿ.ಬಿ.ಚಂದ್ರೇಗೌಡ ಅವರನ್ನು ನೆನಪು ಮಾಡಿಕೊಳ್ಳುವ ಸಲುವಾಗಿ ನುಡಿ ನಮನ ಮತ್ತು ಗಾನ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಮುಖಂಡ ಬಿ.ಕೆ.ಲಕ್ಷ್ಮಣ್ಕುಮಾರ್ ಹೇಳಿದರು.
ಅವರು ಮಂಗಳವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರಿಯ ರಾಜಕಾರಣಿ ದಿವಂಗತ ಡಿ.ಬಿ.ಚಂದ್ರೇಗೌಡ ಅವರು ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಡೆಸಿದ್ದಾರೆ. ಅವರು ದೇಶದ ನಾಲ್ಕು ಸದನಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ರಾಜ್ಯ ಹಾಗೂ ದೇಶದ ಉತ್ತಮ ಕೊಡುಗೆ ನೀಡುವ ಮೂಲಕ ಶ್ರೇಷ್ಠ ರಾಜಕಾರಣಿ ಎನಿಸಿಕೊಂಡಿದ್ದರು. ಅವರ ರಾಜಕೀಯ ಅನುಭವ, ಆದರ್ಶ ಜೀವನ ಎಲ್ಲರಿಗೂ ಮಾದರಿಯಾಗಬೇಕು. ಅವರ ಸಂಸ್ಮರಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಪಕ್ಷ ಹಾಗೂ ಸಂಘ ಸಂಸ್ಥೆ ಮುಖಂಡರು ಸೇರಿ ದಿವಂಗತ ಡಿ.ಬಿ.ಚಂದ್ರೇಗೌಡ ಅವರನ್ನು ನೆನಪು ಮಾಡಿಕೊಳ್ಳುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಡಿ.ಬಿ.ಜಯಪ್ರಕಾಶ್ ಮಾತನಾಡಿ ; ನುಡಿ ನಮನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ರವೀಂದ್ರ ರೇಶ್ಮೆ, ಲೇಖಕ ನೆಂಪೆ ದೇವರಾಜು, ಮಾಜಿ ಕೇಂದ್ರ ಸಚಿವೆ ಡಿ.ಕೆ.ತಾರಾದೇವಿ, ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ.ನಿಂಗಯ್ಯ, ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ದೇವವೃಂದ, ಅಮೇರಿಕಾದ ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷ ಡಾ.ವಿಶ್ವಾಮಿತ್ರ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆ ಮುಖಂಡರಾದ ಡಿ.ಬಿ.ಅಶೋಕ್ ದಾರದಹಳ್ಳಿ, ಬಿ.ಎಲ್.ದಿನೇಶ್ ಬೆಟ್ಟಗೆರೆ, ಗೃಹಮಂಡಳಿ ಮಾಜಿ ಅಧ್ಯಕ್ಷ ಜಿ.ಎಚ್.ಹಾಲಪ್ಪಗೌಡ, ಬಿ.ಜೆ.ಪಿ. ತಾಲ್ಲೂಕು ಅಧ್ಯಕ್ಷ ಜೆ.ಎಸ್.ರಘು, ಕೆಂಪೇಗೌಡ ಯುವ ಒಕ್ಕಲಿಗರ ವೇದಿಕೆ ಅಧ್ಯಕ್ಷ ಬ್ರಿಜೇಶ್ ಕಡಿದಾಳ್ ಉಪಸ್ಥಿತರಿದ್ದರು.