ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಬಹುಭಾಷಾ ಕಲಾವಿದೆ ಲಿಲಾವತಿ ನಮ್ಮನ್ನಗಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ 87ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಪುತ್ರ ವಿನೋದ್ ರಾಜ್ ಜೊತೆ ಬೆಂಗಳೂರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಅವರು ವಾಸವಾಗಿದ್ದರು.
ಲೀಲಾವತಿ ಸುಮಾರು ಐವತ್ತು ವರ್ಷಗಳ ಕಾಲ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ರಾಜ್ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಕನ್ನಡದ ಬಹುತೇಕ ಹಿರಿಯ ನಟರೊಂದಿಗೆ ಲೀಲಾವತಿ ನಾಯಕ ನಟಿಯಾಗಿ ನಟಿಸಿದ್ದರು.
ಅವರು 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದರು. ಅವರು ತಮ್ಮ ಮನೋಜ್ಞ ನಟನೆಯಿಂದ ಚಿತ್ರ ರಸಿಕರ ಪ್ರೀತಿ ಗಳಿಸಿದ್ದರು. ಕನ್ನಡವಲ್ಲದೇ ಇತರೆ ದಕ್ಷಿಣ ಭಾರತದ ಭಾಷೆಗಳ ಚಿತ್ರಗಳಲ್ಲಿಯೂ ಸಹ ನಟಿಸಿದ್ದರು.
ಸಿನಿಮಾ ರಂಗದಿಂದ ದೂರ ಉಳಿದುಕೊಂಡಿದ್ದ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ಅವರ ಪುತ್ರ ವಿನೋದ್ ರಾಜ್ ಕೂಡ ಕೃಷಿ ಕೆಲಸ ಮಾಡುತ್ತಿದ್ದಾರೆ. ಲೀಲಾವತಿ ಅವರ ಅನಾರೋಗ್ಯದ ವಿಷಯ ತಿಳಿದ ಬಳಿಕ ಕನ್ನಡ ಚಿತ್ರರಂಗದ ಅನೇಕರು ಸೋಲದೇವನಹಳ್ಳಿಗೆ ಬಂದು ಆರೋಗ್ಯ ವಿಚಾರಿಸಿದ್ದರು.
ಲೀಲಾವತಿ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರೂ ಕೂಡ ಸಿನಿಮಾ ಕಲಾವಿದರ ಬಗ್ಗೆ ಕಾಳಜಿ ಹೊಂದಿದ್ದರು. ಅನೇಕ ಕಲಾವಿದರಿಗೆ ಮಾಸಾಶನ ಸಿಗುವಂತೆ ಮಾಡಿದ್ದರು. ಪ್ರಾಣಿಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು. ಅದೇ ಕಾರಣಕ್ಕಾಗಿ ಅವರು ಸ್ವಂತ ಹಣದಲ್ಲಿ ಸೋಲದೇವನಹಳ್ಳಿ ಬಳಿ ಪಶು ಆಸ್ಪತ್ರೆ ನಿರ್ಮಿಸಿದ್ದರು. ಅವರು ಅನೇಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಲೀಲಾವತಿ ಅವರ ನಿಧನಕ್ಕೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮುಖಂಡರು, ಚಿತ್ರರಂಗದ ಹಿರಿಯರು, ಗಣ್ಯರು ತಮ್ಮ ಸಂತಾಪ ಸೂಚಿಸಿದ್ದಾರೆ.