ಡಿಸೆಂಬರ್ 23 ಮತ್ತು 24ರಂದು ದಾವಣಗೆರೆಯಲ್ಲಿ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ
ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ ಡಿಸೆಂಬರ್ 23 ಮತ್ತು 24ರಂದು ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಮೈಧಾನದಲ್ಲಿ ನಡೆಯಲಿದೆ. ಈ ಸಮಾವೇಶಕ್ಕೆ ವೀರಶೈವ ಲಿಂಗಾಯತ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಮೂಡಿಗೆರೆ ತಾಲೂಕು ಅಧ್ಯಕ್ಷ ಬಿ.ಎಸ್. ಓಂಕಾರ್ ಮನವಿ ಮಾಡಿದರು.
ಅವರು ಗುರುವಾರ ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತಿಗಣತಿಯನ್ನು ಪುನರ್ ಪರಿಶೀಲನೆ ಹಾಗೂ ವೀರಶೈವ ಸಮಾಜದವರನ್ನು ಓಬಿಸಿ ಮೀಸಲಾತಿಯಡಿಯಲ್ಲಿ ಸೇರಿಸುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಹಿಸಲಿದ್ದಾರೆಂದು ಹೇಳಿದರು.
ಎರಡು ದಿನ ನಡೆಯುವ ಸಮಾವೇಶದಲ್ಲಿ ಕೃಷಿ ಮತ್ತು ಕೈಗಾರಿಕೆ ಅಧಿವೇಶನ, ಶೈಕ್ಷಣಿಕ, ಧಾರ್ಮಿಕ, ನೌಕರರ, ಸಾಹಿತಿಗಳ, ಮಹಿಳಾ ಮತ್ತು ಯುವ ಅಧಿವೇಶನದ ಗೋಷ್ಠಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟಿ, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್, ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ದಾವಣಗೆರೆ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮಾಜಿ ಶಾಸಕರು, ಮಂತ್ರಿಗಳು ಭಾಗವಹಿಸಲಿದ್ದಾರೆ. ಹಾಗಾಗಿ ಮೂಡಿಗೆರೆ ತಾಲೂಕಿನಿಂದ 150ಕ್ಕೂ ಅಧಿಕ ಮಂದಿ ವೀರಶೈವ ಲಿಂಗಾಯತ ಸಮಾಜದವರು ಸಮಾವೇಶಕ್ಕೆ ತೆರಳಲಿದ್ದು, ಸಮಾಜದವರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಜಿಲ್ಲಾ ನಿರ್ದೇಶಕ ಪೂರ್ಣೇಶ್ಮೂರ್ತಿ, ತಾಲೂಕು ಉಪಾಧ್ಯಕ್ಷ ರವಿ ಪಟೇಲ್ ಕೂವೆ, ಕಾರ್ಯದರ್ಶಿ ಬಿ.ಕೆ.ಚಂದ್ರಶೇಖರ್, ಕಾಂತರಾಜ್, ಚಂದ್ರಶೇಖರ್ ಹಿರೇಶಿಗರ ಉಪಸ್ಥಿತರಿದ್ದರು.