ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಕಾರ್ಯಕಾರಿಣಿ ಸಭೆ ಶುಕ್ರವಾರ ನಡೆಯಿತು. ಮೂಡಿಗೆರೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಬೆಳೆಗಾರರ ಭವನ ಕಟ್ಟಡದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ವಹಿಸಿದ್ದರು.
ಸಭೆಯಲ್ಲಿ ಬೆಳೆಗಾರರಿಗೆ ಸಂಬಂಧಿಸಿಂದತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಪ್ರಮುಖವಾಗಿ ಬೆಳೆಗಾರರಿಗೆ ಮಾರಕವಾಗಿರುವ ಸರ್ಫೇಸಿ ಕಾಯ್ದೆಯ ಬಗ್ಗೆ ಅಧ್ಯಕ್ಷರು ಸಭೆಗೆ ಮಾಹಿತಿ ನೀಡಿದರು. ಬ್ಯಾಂಕುಗಳು ಸರ್ಫೇಸಿ ಕಾಯ್ದೆಯಡಿ ತೋಟಗಳನ್ನು ಹರಾಜು ಮಾಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಸರ್ಕಾರ ಕಾಫಿ ಒತ್ತುವರಿ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡುವ ಕಾಯ್ದೆ ಬಗ್ಗೆ ಕರ್ನಾಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ ಸಭೆಯಲ್ಲಿ ಪ್ರಸ್ತಾಪಿಸಿದರು. ಕಾಯ್ದೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರು ತಮ್ಮ ಕಳವಳ ವ್ಯಕ್ತಪಡಿಸಿದರು.
ಸಂಘದ ನೂತನ ಕಟ್ಟಡದ ವಿಚಾರವಾಗಿ ಸಂಘದ ಖಜಾಂಚಿ ಬಿ. ಬಸವರಾಜು ಸಭೆಗೆ ಮಾಹಿತಿ ನೀಡಿದರು, ಕಟ್ಟಡ ನಿರ್ವಹಣೆಗೆ ಸಿಬ್ಬಂದಿಯನ್ನು ನೇಮಕ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕೋಮಾರ್ಕ್ ಮಾಜಿ ಅಧ್ಯಕ್ಷ ಡಿ.ಎಸ್.ರಘು, ಸಂಘದ ಕಾರ್ಯದರ್ಶಿ ಮನೋಹರ್, ರೇವಣ್ಣಗೌಡ, ಓ.ಜಿ.ರವಿ, ಕೆ.ಹೆಚ್. ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.
ಸಹಕಾರ ರತ್ನ ಪ್ರಶಸ್ತಿ ವಿಜೇತರಿಗೆ ಸನ್ಮಾನ
ಇತ್ತೀಚೆಗೆ ರಾಜ್ಯ ಸರ್ಕಾರದಿಂದ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಪಡೆದ ಹಿರಿಯ ಸಹಕಾರಿ ಧುರೀಣ ಓ.ಎಸ್. ಗೋಪಾಲಗೌಡ ಅವರನ್ನು ಸಭೆಯಲ್ಲಿ ಬೆಳೆಗಾರರ ಸಂಘದ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ; ಓ.ಎಸ್. ಗೋಪಾಲಗೌಡರು ಸಹಕಾರ ಕ್ಷೇತ್ರಕ್ಕೆ ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿದರು.