ಕಳೆದ ವಿಧಾನ ಸಭಾ ಚುನಾವಣೆ ವೇಳೆಯಲ್ಲಿ ಬಿ.ಜೆ.ಪಿ. ತೊರೆದು ಕಾಂಗ್ರೇಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿ.ಜೆ.ಪಿ. ತೆಕ್ಕೆಗೆ ಬಂದಿದ್ದಾರೆ.
ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಬಿ.ಜೆ.ಪಿ. ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಬಿ.ವೈ. ವಿಜಯೇಂದ್ರ ಅವರು ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಒಂದು ಮಾಹಿತಿಯ ಪ್ರಕಾರ, ಜಗದೀಶ್ ಶೆಟ್ಟರ್ ಅವರನ್ನು ಬಹಳ ಹಿಂದೆಯೇ ಸಂಪರ್ಕ ಮಾಡಲಾಗಿತ್ತು. ಶೆಟ್ಟರ್ ಸಹ ಕಾಂಗ್ರೆಸ್ನಲ್ಲಿ ಅಷ್ಟಾಗಿ ಒಗ್ಗಿಕೊಳ್ಳಲಾಗದೆ ತೊಳಲಾಟದಲ್ಲಿದ್ದರು ಎನ್ನಲಾಗಿದೆ. ಇದರ ಜತೆಗೆ ಲಿಂಗಾಯತ ಮುಖಂಡರಾಗಿರುವ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆತಂದರೆ ಲೋಕಸಭಾ ಚುನಾವಣೆಯಲ್ಲಿ ಪ್ಲಸ್ ಆಗಲಿದೆ ಎಂಬ ಲೆಕ್ಕಾಚಾರ ಬಿ.ವೈ. ವಿಜಯೇಂದ್ರ ಅವರದ್ದಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೆಟ್ಟರ್ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಅವರಿಂದ ಸಾಕಷ್ಟು ಲಾಭವಾಗಿತ್ತು. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದವರು ಕಾಂಗ್ರೆಸ್ ಬೆಂಬಲಕ್ಕೆ ನಿಂತರು. ಇದರಿಂದ ಬಿಜೆಪಿಯ ಸಾಂಪ್ರದಾಯಿಕ ವೋಟುಗಳು ವಿಭಜನೆಯಾಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಪರಿಪಾಠ ಮುಂದುವರಿಯಬಹುದು ಎಂಬ ಆತಂಕ ಬಿ.ಜೆ.ಪಿ. ವಲಯದಲ್ಲಿತ್ತು. ಹಾಗಾಗಿ ಶೆಟ್ಟರ್ ಅವರನ್ನು ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಡಿಯೂರಪ್ಪ ಮತ್ತು ವಿಜಯೇಂದ್ರ ಕಾರ್ಯನಿರತರಾಗಿದ್ದರು ಎನ್ನಲಾಗಿದೆ.
ಇನ್ನು ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ನಿಂದ ಒಪ್ಪಿಗೆ ಪಡೆದುಕೊಂಡಿದ್ದ ಬಿ.ವೈ. ವಿಜಯೇಂದ್ರ, ಗುರುವಾರ ಗೃಹ ಸಚಿವ ಅಮಿತ್ ಶಾ ಅವರ ಜತೆಗೂ ಭೇಟಿ ಮಾಡಿಸಿ ಮಾತುಕತೆಗೆ ವೇದಿಕೆ ಒದಗಿಸಿದ್ದರು. ಈ ವೇಳೆ ಬಿ.ಎಸ್. ಯಡಿಯೂರಪ್ಪ ಅವರೂ ಸಹ ಜತೆಗಿದ್ದರು. ಅಲ್ಲದೆ, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಕುರಿತು ಬಿಜೆಪಿ ಹೈಕಮಾಂಡ್ನಿಂದ ಶೆಟ್ಟರ್ಗೆ ಅಭಯ ಸಿಕ್ಕಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶೆಟ್ಟರ್ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನೆಡಸಲಾಗಿದೆ ಎನ್ನಲಾಗಿದೆ.
ಕಾಂಗ್ರೇಸ್ ಪಕ್ಷದಿಂದ ಶೇಟ್ಟರ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಇದೀಗ ಶೆಟ್ಟರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ಮತ್ತು ಕಾಂಗ್ರೇಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.