ನಾಲ್ಕು ದಿನಗಳ ವಿಶೇಷ ವಿಧಾನಸಭೆ ಅಧಿವೇಶನ ವೇಳೆ ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಅನುಮೋದನೆ ಮಾಡಿದೆ. (Uniform Civil Code Bill). ಆ ಮೂಲಕ, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ಸ್ವತಂತ್ರ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗೋವಾದಲ್ಲಿ ಈಗಾಗಲೇ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದೆ. ಪೋರ್ಚುಗೀಸ್ ಆಡಳಿತವಿದ್ದಾಗಲೇ ಗೋವಾದಲ್ಲಿ ನಾಗರಿಕ ಸಂಹಿತೆ ಅನುಷ್ಠಾನಗೊಂಡಿದೆ.
ವಿಧೇಯಕ ಕುರಿತು ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಮದುವೆ, ಜೀವನಾಂಶ, ಉತ್ತರಾಧಿಕಾರ ಮತ್ತು ವಿಚ್ಛೇದನದಂತಹ ವಿಷಯಗಳಲ್ಲಿ ಯಾವುದೇ ತಾರತಮ್ಯವಿಲ್ಲದೆ ಏಕರೂಪ ನಾಗರಿಕ ಸಂಹಿತೆ ಎಲ್ಲರಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ ಎಂದು ಹೇಳಿದರು.
ಏಕರೂಪ ನಾಗರಿಕ ಸಂಹಿತೆಯು ಮಹಿಳೆಯರ ವಿರುದ್ಧ ಅನ್ಯಾಯ ಮತ್ತು ತಪ್ಪು ಕಾರ್ಯಗಳನ್ನು ನಿರ್ಮೂಲನೆ ಮಾಡಲು ಸಹಾಯ ಮಾಡುತ್ತದೆ. ‘ಮಾತೃಶಕ್ತಿ’ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವ ಸಮಯ ಬಂದಿದೆ… ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಮೇಲಿನ ತಾರತಮ್ಯ ನಿಲ್ಲಬೇಕು… ಜನಸಂಖ್ಯೆಯ ಅರ್ಧದಷ್ಟು ಜನರು ಈಗ ಸಮಾನ ಹಕ್ಕುಗಳನ್ನು ಪಡೆಯಬೇಕು ಎಂದು ಅವರು ಹೇಳಿದರು.