ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಅದಕ್ಕಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಯಾವುದೇ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅವರು ಭಾನುವಾರ ಚಿಕ್ಕಮಗಳೂರಿಗೆ ಆಗಮಿಸಿ ಪಕ್ಷದ ಜಿಲ್ಲಾ ಮುಖಂಡರ ಸಭೆ ನಡೆಸಿದರು. ಈ ವೇಳೆ ಲೋಕಸಭಾ ಚುನಾವಣೆ ತಯಾರಿಯ ಬಗ್ಗೆ ಸಮಾಲೋಚನೆ ನಡೆಸಿದರು.
‘ಶೋಭಾ ಗೋಬ್ಯಾಕ್’ ಅಭಿಯಾನ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶೋಭಾ ವಿರುದ್ಧ ವ್ಯವಸ್ಥಿತವಾಗಿ ಪಿತೂರಿ, ಷಡ್ಯಂತ್ರ ನಡೆಸಲಾಗುತ್ತಿದೆ. ಅದರ ಹಿಂದೆ ಯಾರಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವಂತದ್ದೆ ಎಂದು ಮಾರ್ಮಿಕವಾಗಿ ನುಡಿದರು. ಆದರೆ ಶೋಭಾ ಯಾವುದಕ್ಕೂ ಧೃತಿಗೆಡುವುದಿಲ್ಲ ಎಲ್ಲವನ್ನೂ ಫೇಸ್ ಮಾಡ್ತಾರೆ. ಸಚಿವೆಯಾಗಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯಿಂದಾಗಿ ದೇಶ, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಈ ಬಾರಿ ನಾವು 28ಕ್ಕೆ 28 ಸ್ಥಾನ ಗೆಲ್ಲಬೇಕು ಎಂದು ಪ್ರಯತ್ನ ಮಾಡುತ್ತಿದ್ದೇವೆ. ಗೆಲ್ಲುವ ವಾತಾವರಣವಿದೆ ಎಂದರು. ಇದೇ ವೇಳೆ ಮಂಡ್ಯ ಲೋಕಸಭಾ ಚುನಾವಣೆ ಟಿಕೆಟ್ ಗೊಂದಲ ಕುರಿತಂತೆ ಮಾಧ್ಯಮಗಳ ಕೇಳಿದ ಪ್ರಶ್ನೆಗೆ, ಮಂಡ್ಯದ ಬಗ್ಗೆ ಇನ್ನೂ ಯಾವುದೇ ಚರ್ಚೆ ಆಗಿಲ್ಲ. ಇಂದು ನಾಳೆ ಗೊತ್ತಾಗುತ್ತೆ ಎಂದರು.
ಗೋ ಬ್ಯಾಕ್ ಶೋಭಾ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು ಎಂಬ ಮಾತು ಹೇಳುವ ಮೂಲಕ ಬಿ.ಎಸ್.ವೈ. ಪಕ್ಷದ ಮುಖಂಡರಲ್ಲಿ ಅಚ್ಚರಿ ಮೂಡಿಸಿದರು. ಹಾಗಾದರೆ ಬಿ.ಎಸ್.ವೈ. ಯಾಕೆ ಈ ಮಾತು ಹೇಳಿದರು. ಯಾರನ್ನು ಟಾರ್ಗೆಟ್ ಮಾಡಿ ಇಂತಹ ಮಾತುಗಳನ್ನು ಆಡಿದ್ದಾರೆ ಎಂಬ ಚರ್ಚೆಗಳು ಜಿಲ್ಲೆಯ ರಾಜಕೀಯ ವಲಯದಲ್ಲಿ ಬಿರುಸಾಗಿ ಸಾಗುತ್ತಿದೆ.