ಗ್ಯಾರಂಟಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಭಾನುವಾರ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಆಯೋಜನೆಗೊಂಡಿದ್ದ ಸಮಾವೇಶವನ್ನು ವಿರೋಧ ಪಕ್ಷಗಳ ನಿಂದನೆಯ ವೇದಿಕೆಯನ್ನಾಗಿಸಿಕೊಂಡಿರುವುದು ಖಂಡನೀಯ ಎಂದು ಬಿ.ಜೆ.ಪಿ. ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಹೇಳಿದ್ದಾರೆ.
ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಮಾವೇಶ ನಡೆಸಿರುವುದು ನಾಚಿಕೆಗೇಡಿನ ಸಂಗತಿ.ಜಿಲ್ಲೆಗೆ ಬರಿಗೈಯಲ್ಲಿ ಬಂದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಯೋಜನೆ, ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದ್ದಾರೆ. ತಮ್ಮ ಸರ್ಕಾರದ ವತಿಯಿಂದ ಜಿಲ್ಲೆಗೆ ಯಾವುದೇ ನಿರ್ದಿಷ್ಟ ಘೋಷಣೆಗಳನ್ನು ಮಾಡದೇ ಅಡ್ಡಗೋಡೆಮೇಲೆ ದೀಪವಿಟ್ಟಂತೆ ಜನರ ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ ಎಂದು ದೂರಿದ್ದಾರೆ.
ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಶಾಸಕರನ್ನು ಹೊಂದಿರುವುದರಿಂದ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಮುಖ್ಯ ಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಬಹುದೆಂದು ಜಿಲ್ಲೆಯ ಜನರು ನಿರೀಕ್ಷಿಸಿದ್ದರು. ಆದರೆ, ಯಾವುದೇ ಹೊಸ ಯೋಜನೆ, ಕಾರ್ಯಕ್ರಮಗಳೊಂದಿಗೆ ಬಾರದೆ ಬರಿಗೈಯಲ್ಲಿ ಬಂದಿದ್ದ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಕಾಮಗಾರಿ ಮುಗಿದಿದ್ದ ಯೋಜನೆಗಳನ್ನು ಉದ್ಘಾಟಿಸಿ ಹಿಂದಿರುಗಿದ್ದು ಜಿಲ್ಲೆಯ ಜನರಲ್ಲಿ ತೀವ್ರ ನಿರಾಸೆಗೊಳಿಸಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಒಂದು ವಾರದಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸರಕಾರದ ಹಣವನ್ನು ವ್ಯಯಿಸಿ ಕಾರ್ಯಕ್ರಮ ಆಯೋಜಿಸಿತ್ತು. ಎಲ್ಲವೂ ನಿಯಮಾನುಸಾರವೇ ನಡೆಯಬೇಕಿತ್ತು. ಆದರೆ, ಅದು ಸರ್ಕಾರಿ ಕಾರ್ಯಕ್ರಮದ ಬದಲು ಕಾಂಗ್ರೆಸ್ ಸಮಾವೇಶವಾಗಿ ಪರಿವರ್ತನೆಗೊಂಡಿತ್ತು.
ಮುಖ್ಯ ವೇದಿಕೆಯಲ್ಲಿ ಮಾಜಿ ಸಚಿವೆ ಮೋಟಮ್ಮ, ರಾಜ್ಯ ಸಭೆ ಮಾಜಿ ಸದಸ್ಯ ಹನುಂತಯ್ಯ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್ ಸೇರಿದಂತೆ ಕಾಂಗ್ರೆಸ್ನ ಅನೇಕ ಮುಖಂಡರು ವೇದಿಕೆ ಹಂಚಿಕೊಂಡಿದ್ದು, ಜನರ ದುಡ್ಡಲ್ಲಿ ಕಾಂಗ್ರೆಸ್ ಸಮಾವೇಶವಾಗಿ ಪರಿವರ್ತನೆಗೊಂಡಿದ್ದಕ್ಕೆ ನಿದರ್ಶನವಾಗಿತ್ತು ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಸ್ಯೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯ ಮಂತ್ರಿ ಶಿವಕುಮಾರ್ ಮಾತನಾಡುವ ಬದಲು ನಮ್ಮ ಪಕ್ಷದ ಮಾಜಿ ಸಚಿವ ಡಾ.ಸಿ.ಟಿ.ರವಿ, ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನಿಂದಿಸಿ, ವಿರೋಧ ಪಕ್ಷ ಬಿಜೆಪಿಯನ್ನು ಟೀಕಿಸುವ ಮೂಲಕ ಗ್ಯಾರಂಟಿ ಫಲಾನುಭವಿಗಳ ಹೆಸರಿನಲ್ಲಿ ಸರ್ಕಾರದ ಹಣ ಪೋಲಾಗಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.