ಗ್ರಾಮೀಣ ರೈತಾಪಿ ವರ್ಗದವರ ಆರ್ಥಿಕ ಅಭಿವೃದ್ಧಿಗೆ ಕೃಷಿ ಸಖಿಯರ ಪಾತ್ರ ಪ್ರಮುಖವಾಗಲಿ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಹಿರಿಯ ಕೃಷಿ ವಿಜ್ಞಾನಿ ಡಾ. ಕೃಷ್ಣಮೂರ್ತಿ ಅಭಿಪ್ರಾಯಿಸಿದರು.
ಅವರು ಬುಧವಾರ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿ.ಪಂ. ಚಿಕ್ಕಮಗಳೂರು, ಕರ್ನಾಟಕ ರಾಷ್ಟ್ರೀಯ ಗ್ರಾಮೀನ ಜೀವನೋಪಾಯ ಸಂವರ್ಧನ ಸಂಸ್ಥೆ, ಸಂಜೀವಿನಿ, ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆಯೋಜಸಿದ್ದ ಚಿಕ್ಕಮಗಳೂರು ಜಿಲ್ಲೆಯ ಕೃಷಿ ಸಖಿಯರಿಗೆ ಐದು ದಿನಗಳ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಕೃಷಿ ಸಖಿ ಎಂಬ ಪರಿಕಲ್ಪನೆಯಂತೆ ಪ್ರತೀ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಮಹಿಳೆಯನ್ನು ಕೃಷಿ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಅದೇ ರೀತಿ ಹೈನುಗಾರಿಕೆಗೆ ಪೂರಕವಾಗಿ ಪಶು ಸಖಿ ಎಂಬ ಹುದ್ದೆ ಸೃಷ್ಟಿಸಿ ಪ್ರತೀ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಮಹಿಳೆಯನ್ನು ನೇಮಿಸಲಾಗಿದೆ. ಕೃಷಿ ಸಖಿಯರು ರೈತರು ಮತ್ತು ಇಲಾಖೆಗಳ ನಡುವೆ ಸಂಪರ್ಕ ಸೇತುವಾಗಿ ಕೆಲಸ ಮಾಡಲಿದ್ದಾರೆ. ಇದರಿಂದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ದೊರೆಯಲಿದೆ. ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿಗಳ ಕೃಷಿ ಸಖಿಯರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಂತಹಂತವಾಗಿ ತರಬೇತಿ ನೀಡಲಾಗುತ್ತದೆ. ಇದರಿಂದ ಕೃಷಿ ಸಖಿಯರು ಗ್ರಾಮೀಣ ಪ್ರದೇಶದಲ್ಲಿ ರೈತರೊಂದಿಗೆ ಉತ್ತಮವಾಗಿ ಸಂವಹನ ನಡೆಸಿ ಕಾರ್ಯನಿರ್ವಹಿಸಲು ಸಹಾಯಕವಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡಿಗೆರೆ ತಾಲ್ಲೂಕು ರೈತ ಉತ್ಪಾದನಾ ಸಂಸ್ಥೆಯ ಅಧ್ಯಕ್ಷ ಹೆಚ್.ಕೆ. ಪೂರ್ಣೇಶ್ ಜಿ.ಹೊಸಳ್ಳಿ ಮಾತನಾಡಿ ಕೃಷಿ ಸಖಿಯರಿಗೆ ನೀಡುವ ತರಬೇತಿ ತುಂಬಾ ಉಪಯುಕ್ತವಾಗಿದ್ದು, ಸರ್ಕಾರ ರೈತರಿಗೆ ಸಾವಯವ ಕೃಷಿ ಕೈಗೊಳ್ಳಲು ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಕೃಷಿ ಸಖಿಯರು ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಉತ್ತಮ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿ ರೈತರ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಸುಚಿತ್ರಕುಮಾರಿ, ಡಾ. ಉಲ್ಲಾಸ್, ಡಾ. ಪ್ರಶಾಂತ್ ಉಪಸ್ಥಿತರಿದ್ದು ಕೃಷಿ ಸಖಿಯರಿಗೆ ಮಾಹಿತಿ ನೀಡಿದರು.
ಚಿಕ್ಕಮಗಳೂರು ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ತಲಾ ಐದು ಮಂದಿ ಕೃಷಿ ಸಖಿಯರು ತರಬೇತಿಯಲ್ಲಿ ಭಾಗವಹಿಸಿದ್ದಾರೆ. ಇದು ಮೊದಲ ತಂಡವಾಗಿದ್ದು, ಹಂತಹಂತವಾಗಿ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತಿಗಳ ಕೃಷಿ ಸಖಿಯರಿಗೆ ತರಬೇತಿ ನೀಡುವ ಕಾರ್ಯಕ್ರಮ ಇದಾಗಿದೆ.