ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಮೂಡಿಗೆರೆ ತಾಲ್ಲೂಕು ಮೇಕನಗದ್ದೆ ಗ್ರಾಮದ ಕಿರಣ್ ಎಂಬುವವನನ್ನು ಶನಿವಾರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈತ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವನೆಂದು ತಿಳಿದುಬಂದಿದೆ.
ಕೆಲ ತಿಂಗಳ ಹಿಂದೆ ತತ್ಕೊಳ ಮೀಸಲು ಅರಣ್ಯ ವ್ಯಾಪ್ತಿಯ ಕುಂಡ್ರ ಗ್ರಾಮದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿ ಅದರ ಬೆಲೆಬಾಳುವ ಅಂಗಾಂಗಗಳನ್ನು ಬೇರ್ಪಡಿಸಿ ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಹುಲಿ ಹತ್ಯೆ ಮಾಡಿರುವ ಪ್ರಮುಖ ಆರೋಪಿಯೆಂದು ಗುರುತಿಸಿರುವ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಕುಂಡ್ರ ಗ್ರಾಮದ ಸುರೇಶ್ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಸುರೇಶ್ ಬಂಧನವಾದರೆ ಈ ಪ್ರಕರಣದ ಸಮಗ್ರ ಮಾಹಿತಿ ಹೊರಬರಲಿದ್ದು, ಇನ್ನು ಯಾರ್ಯಾರು ಈ ಜಾಲದ ಹಿಂದೆ ಇದ್ದಾರೆ ಎಂಬುದು ಬೆಳಕಿಗೆ ಬರಲಿದೆ.