ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ದೇಶದ ಬಗ್ಗೆ ಚಿಂತನೆ ನಡೆಸಿ ಮೋದಿ ಅವರೇ ಮತ್ತೆ ಪ್ರಧಾನಿಯಾಗಬೇಕೆಂಬ ದೃಷ್ಟಿಯಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಇದನ್ನು ಸಹಿಸದ ಮಾಜಿ ಸಚಿವೆ ಮೋಟಮ್ಮ ಅವರು ಸೇರಿದಂತೆ ಕಾಂಗ್ರೇಸ್ ಮುಖಂಡರು ದೇವೇಗೌಡರ ವಿರುದ್ಧ ಲಘುವಾಗಿ ಮಾತನಾಡಿರುವುದು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗಬ್ಬಳ್ಳಿ ಚಂದ್ರೇಗೌಡ ಹೇಳಿದರು.
ಅವರು ಮಂಗಳವಾರ ಮೂಡಿಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಹಿತದೃಷ್ಟಿಯಿಂದ ಎಚ್.ಡಿ. ದೇವೇಗೌಡರು ಯಾವುದೇ ಷರತ್ತು ಹಾಕದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮತ ಪ್ರಚಾರದಲ್ಲಿ ತೊಡಗಿದ್ದಾರೆ. ದೇವೇಗೌಡರು ಪ್ರಧಾನಿಯಾಗಿದ್ದಾಗ ಜನಪರವಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಪ್ರಧಾನಿ ಎಂದೆನಿಸಿಕೊಂಡಿದ್ದಾರೆ ಅಂತವರು ಬಿಜೆಪಿಯೊಂದಿಗೆ ಕೈ ಜೋಡಿಸಿರುವುದನ್ನು ವಿರೋಧಿಸುವ ನೈತಿಕತೆ ಅವರಿಗಿಲ್ಲ. ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ನಡೆಸಿರುವುದು ಅವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.
ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಸಂಚಾಲಕ ಸುದರ್ಶನ್ ಮಾತನಾಡಿ, ಕಾಂಗ್ರೆಸ್ನವರಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಭಯ ಶುರುವಾಗಿದೆ. 70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು 3 ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದೆ. ಅಲ್ಲದೇ ಅಂಬೇಡ್ಕರ್ ಅವರು ನಿಧನರಾದಾಗ ದೆಹಲಿಯಲ್ಲಿ ಶವ ಸಂಸ್ಕಾರಕ್ಕೆ ಜಾಗ ಕೊಡಲಿಲ್ಲ. ನಿಜವಾಗಿರೂ ಅಂಬೇಡ್ಕರ್ ಅವರ ತತ್ವ ಸಿದ್ದಾಂತ ಅನುಸರಿಸುವವರು ಕಾಂಗ್ರೆಸ್ನ್ನು ಬೆಂಬಲಿಸುವುದಿಲ್ಲ. 11.5 ಕೋಟಿ ರೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿರಿಸಿದ್ದ ಹಣವನ್ನು ಗ್ಯಾರಂಟಿಗೆ ಬಳಸಿ ದಲಿತರಿಗೆ ಅನ್ಯಾಯ ಮಾಡಿದ್ದಾರೆ. ಇದಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆಂದು ಹೇಳಿದರು.
ಮುಖಂಡರಾದ ಎಂ.ಆರ್.ಜಗದೀಶ್, ವಿನಯ್ ಹಳೆಕೋಟೆ, ಪರೀಕ್ಷಿತ್ ಜಾವಳಿ, ಎಂ.ಸಿ.ಹೂವಪ್ಪ, ಸಂದೀಪ್ ನಂದಿಪುರ, ನಯನ ತಳವಾರ ಉಪಸ್ಥಿತರಿದ್ದರು.