ಸ್ಥೂಲಕಾಯ ಹೊಂದಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತೂಕ ಕಡಿಮೆ ಮಾಡಿಕೊಳ್ಳುವ ಕುರಿತು ಆರೋಗ್ಯ ಮಾಹಿತಿ ನೀಡಲಾಯಿತು.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಎರಡು ದಿನಗಳ ಕಾರ್ಯಾಗಾರದಲ್ಲಿ ಆಹಾರ ಪದ್ದತಿ, ಆರೋಗ್ಯಕರ ಜೀವನಶೈಲಿ ಮತ್ತು ವ್ಯಾಯಾಮದ ಕುರಿತು ಮಾಹಿತಿ ನೀಡಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮೊದಲನೇ ತಂಡಕ್ಕೆ ಇಂದು ಸಮಾಲೋಚನೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು.
ನಗರದ ಆಶ್ರಯ ಆಸ್ಪತ್ರೆಯ ಆಹಾರ ತಜ್ಞರಾದ ಡಾ. ಎ.ಎಸ್.ಅನುಷಾ ಅವರು ವೈದ್ಯಕೀಯ ಸಲಹೆಗಳನ್ನು ನೀಡಿದರು. ಅವರೊಂದಿಗೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಸೂಕ್ತ ಔಷಧಿ, ಮಾತ್ರೆಗಳು ಮತ್ತು ಜೀವನ ಶೈಲಿ, ವ್ಯಾಯಾಮಗಳ ಕುರಿತು ಮಾಹಿತಿಗಳನ್ನು ನೀಡಿದರು.
ಎರಡು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಸ್ಥೂಲಕಾಯ ಹೊಂದಿದ್ದ ಹಲವು ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು. ಪ್ರತಿಯೊಬ್ಬರೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದ ವೈದ್ಯಕೀಯ ಸಿಬ್ಬಂದಿಗಳು ಪ್ರತಿನಿತ್ಯ ಸೇವಿಸಬೇಕಾದ ಆಹಾರ ಮತ್ತು ಅಳವಡಿಸಿಕೊಳ್ಳಬೇಕಾದ ಜೀವನ ಶೈಲಿ ಬಗ್ಗೆ ಮಾಹಿತಿ ನೀಡಿದ್ದಲ್ಲದೆ, ಪ್ರತಿ ದಿನ ಯೋಗಾಭ್ಯಾಸ ಮತ್ತು ವ್ಯಾಯಾಮವನ್ನು ಕಡ್ಡಾಯವಾಗಿ ಮಾಡುವ ಮೂಲಕ ಮಾನಸಿಕ, ದೈಹಿಕ ಆರೋಗ್ಯವನ್ನು ಕಾಡಪಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. ರಕ್ತದೊತ್ತಡ, ಮಧುಮೇಹದಂತಹ ಸಮಸ್ಯೆಯಿಂದ ದೂರವಿರಲು ಅಗತ್ಯವಿರುವ ದೈಹಿಕ ವ್ಯಾಯಾಮ ಮೈಗೂಡಿಸಿಕೊಳ್ಳಬೇಕು. ಸದಾ ಚಟುವಟಿಕೆಯಿಂದಿರಬೇಕು ಎಂದು ವೈದ್ಯರು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಮತ್ತಿತರೆ ಅಧಿಕಾರಿಗಳು ಹಾಜರಿದ್ದು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.