ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಮತ್ತು ಸುತ್ತಮುತ್ತಲಿನ ಗಿರಿಶ್ರೇಣಿ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ಜೀಪ್ ಗಳ ತಪಾಸಣೆ ಮತ್ತು ಚಾಲಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಮತ್ತು ಸಾರಿಗೆ ಇಲಾಖೆಯ ಸಹಯೋಗದಲ್ಲಿ ಚಿಕ್ಕಮಗಳೂರು ನಗರದಲ್ಲಿರುವ ಡಿಎಆರ್ ಕವಾಯತು ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಒಟ್ಟು 75 ಜೀಪ್ ಗಳ ತಪಾಸಣೆಯನ್ನು ನಡೆಸಿ, ವಾಹನಗಳ ದಾಖಲಾತಿಗಳನ್ನು ಪರಿಶೀಲಿಸಿದರು ಹಾಗೂ ಒಟ್ಟು 90 ಚಾಲಕರು ಮತ್ತು ಮಾಲೀಕರಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವತಿಯಿಂದ ವೈದ್ಯಕೀಯ ತಪಾಸಣೆ ಹಾಗೂ ಸಾರಗೋಡು ಕಣ್ಣಿನ ಆಸ್ಪತ್ರೆಯ ವತಿಯಿಂದ ಕಣ್ಣಿನ ಪರೀಕ್ಷೆಯನ್ನು ನಡೆಸಲಾಯಿತು.
ಡಾ. ವಿಕ್ರಮ ಅಮಟೆ, ಐ.ಪಿ.ಎಸ್., ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ ರವರು ವಾಹನ ಚಾಲಕರೊಂದಿಗೆ ಸಂವಹನ ನಡೆಸಿ, ಕಾನೂನು ಹಾಗೂ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಡಿ.ವೈ.ಎಸ್.ಪಿ. ಚಿಕ್ಕಮಗಳೂರು, ಸಿಪಿಐ ಬಸವನಹಳ್ಳಿ ವೃತ್ತ, ಸಿ.ಪಿ.ಐ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.