ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಶಿಕ್ಷಣದ ಮೂಲಕ ಜ್ಞಾನ ಸಂಪಾಧಿಸಿದಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನ ಹಾಗೂ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ಅವರು ಸೋಮವಾರ ಮೂಡಿಗೆರೆ ಪಟ್ಟಣದ ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿ ಮಾತನಾಡಿದರು. ಈಗಾಗಲೇ ಬೇಸಿಗೆ ರಜೆ ಮುಗಿದು ಶಾಲೆ ಪ್ರಾರಂಭಗೊಂಡಿದೆ. ರಾಜ್ಯ ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಅದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಶಾಲೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಪ್ರಾಂಶುಪಾಲರು ಅಥವಾ ತನ್ನ ಗಮನಕ್ಕೆ ತರಬೇಕೆಂದು ಹೇಳಿದರು.
ಬಳಿಕ ಶಾಲೆ ಕೊಠಡಿಗಳ ನಿರ್ವಹಣೆ ಬಗ್ಗೆ ಪರಿಶೀಲಿಸಿದರು. ನಂತರ ಡಿಎಸ್ಬಿಜಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿ, ಕಾಲೇಜು ಅಭಿವೃದ್ಧಿ, ದಾಖಲಾತಿ ಹಾಗೂ ಇತರೆ ಸಮಸ್ಯೆ ಬಗ್ಗೆ ವಿಚಾರಿಸಿದರು.