ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೂಲಸೌಕರ್ಯ ಒದಗಿಸಿಕೊಡಬೇಕು ಎಂದು ದಸಂಸ ಮುಖಂಡರುಗಳು ಜಿಲ್ಲಾ ಸರ್ಜನ್ ಡಾ|| ಮೋಹನ್ಕುಮಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್ಕುಮಾರ್ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಅಲ್ಲದೇ ಮೆಡಿಷಲ್ಗಳನ್ನು ಹೊರಭಾಗದಿಂದ ತರಲು ವೈದ್ಯರುಗಳು ಸೂಚಿಸುತ್ತಿದ್ದಾರೆ ಎಂದರು.
ರಕ್ತ ಪರೀಕ್ಷೆಯನ್ನು ಖಾಸಗೀ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸುತ್ತಿರುವ ಪರಿಣಾಮ ಬಡರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಲ್ಲದೇ ಆಯುಷ್ಯ ಘಟಕದ ಸ್ವಚ್ಚತಾ ಕೊಠಡಿಗಳು ಮಲಮೂತ್ರ ಭರ್ತಿಯಾ ಗಿ ಗಬ್ಬುನಾರುತ್ತಿದೆ. ಇದರಿಂದ ದಾಖಲಾಗಿರುವ ರೋಗಿಗಳಿಗೆ ಬಹಳಷ್ಟು ಸಮಸ್ಯೆಯಾಗಿದೆ ಎಂದು ತಿಳಿಸಿದರು.
ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿ ಬಡರೋಗಿಗಳೇ ಹೆಚ್ಚಾಗಿ ಧಾವಿಸುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಸೌಲಭ್ಯಗಳನ್ನು ಒದಗಿಸದಿದ್ದಲಿ ಸಂಘಟನೆಯ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ದೇವರಾಜ್, ಮುಖಂಡರಾದ ಟಿ.ಎಲ್. ಗಣೇಶ್, ದೇವರಾಜ್, ಗೀತಾ, ನಾಗೇಶ್, ಮಂಜುನಾಥ್ ಮತ್ತಿತರರು ಹಾಜರಿದ್ದರು.